ನೊಂದವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ: ಡಿ.ಕೆ. ಶಿವಕುಮಾರ್

Update: 2021-07-15 10:11 GMT

ಚಿತ್ರದುರ್ಗ : ‘ಕಳೆದೊಂದು ವರ್ಷದಿಂದ ಕೋವಿಡ್ ಸಮಯದಲ್ಲಿ ಪರಿಶಿಷ್ಟ ಜಾತಿ, ಪಂಗಡದವರು, ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಬಂದಿರುವ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆ ಆಲಿಸಿ ಅವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ ರೂಪಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಹಳ್ಳಿಗಾಡಿನಲ್ಲಿ ತಮ್ಮ ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಬರುತ್ತಿರುವವರು ಕಳೆದೊಂದು ವರ್ಷದಿಂದ ಕೊರೋನಾ ಸಮಯದಲ್ಲಿ ಬಹಳ ನೋವು ಅನುಭವಿಸಿದ್ದಾರೆ. ಅವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಉದ್ಯೋಗ, ವೃತ್ತಿ ಕಳೆದು ಕೊಂಡಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಹಾಳಾಗಿದೆ. ಮುಂದೆ ಏನು ಮಾಡಬೇಕು? ಕೆಲಸಕ್ಕಾಗಿ ಹೊರಗೆ ಹೋದರೆ ಮರಳಿ ಮನೆಗೆ ಬಂದಾಗ ನೋಡುವ ರೀತಿ ಬೇರೆ - ಹೀಗೆ ಹತ್ತಾರು ಸಮಸ್ಯೆಗಳನ್ನು ಅವರು ನಮ್ಮ ಮುಂದಿಟ್ಟಿದ್ದಾರೆ. ಈ ಸಮುದಾಯದ ಎಲ್ಲ ಪಕ್ಷಗಳ ಮುಖಂಡರು ನಮ್ಮ ಬಳಿ ಬಂದು ಚರ್ಚೆ ಮಾಡಿದ್ದಾರೆ. 

ನಾನು ಈಗಾಗಲೇ ಕರಾವಳಿ ಪ್ರದೇಶದ ಮೀನುಗಾರರ ಸಮಸ್ಯೆ ಆಲಿಸಿದ್ದೇನೆ. ಇನ್ನು ಲಂಬಾಣಿ  ಸಮುದಾಯದವರ ತಾಂಡಾಗಳಿಗೆ ಭೇಟಿ ನೀಡಿ, ಅವರ ಪರಂಪರೆ, ಸಂಸ್ಕೃತಿ, ಶ್ರಮ ತಿಳಿದಿದ್ದೇನೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭೇಟಿ ನೀಡಿ ಅವರ ಸಮಸ್ಯೆ ಹಾಗೂ ನೋವನ್ನು ನಾನೇ ನನ್ನ ಕಣ್ಣಾರೆ ಕಂಡು ಕಿವಿಯಾರೆ ಕೇಳಬೇಕು ಎಂದು ಹೊನ್ನಾಳಿ ತಾಲೂಕಿನಲ್ಲಿ ಸೇವಾಲಾಲ್ ಅವರ ಜನ್ಮ ಸ್ಥಳದಿಂದ ಪ್ರವಾಸ ಆರಂಭಿಸಿ ಶಿವಮೊಗ್ಗ, ಬಾಗಲಕೋಟೆ, ಬಿಜಾಪುರಕ್ಕೆ ಭೇಟಿ ನೀಡಲಿದ್ದೇನೆ. ನಾಳಿದ್ದು, ನೇಕಾರರನ್ನು ಭೇಟಿ ಮಾಡುತ್ತೇನೆ. ಅವರು ಕೂಡ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಸಮಸ್ಯೆ ಆಲಿಸುತ್ತೇನೆ. ಕೇವಲ ಶಿವಕುಮಾರ್ ಮಾತ್ರವಲ್ಲ ಇಡೀ ಕಾಂಗ್ರೆಸ್ ಪಕ್ಷ ಅವರ ಪರ ವಾಗಿ ಹೋರಾಡಲಿದೆ. ಇದು ಕೇವಲ ಕಾಂಗ್ರೆಸ್ ಕಾರ್ಯಕ್ರಮವಲ್ಲ. ನೊಂದ ಜನರಿಗೆ ಸಾಮೂಹಿಕವಾಗಿ ನಾವೆಲ್ಲ ಧ್ವನಿಯಾಗಿ ನಿಲ್ಲಲು, ಅವರಿಗೆ ಶಕ್ತಿ ತುಂಬಲು ಈ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು. 

ಕೊಟ್ಟ ಮಾತು ಉಳಿಸಿಕೊಂಡವರು ಸಿದ್ದರಾಮಯ್ಯ

ಇನ್ನು ಕಾಂಗ್ರೆಸ್ ನಲ್ಲಿ ಈಗಲೇ ಮ್ಯೂಸಿಕಲ್ ಚೇರ್ ಆಟ ನಡೆಯುತ್ತಿದೆ ಹಾಗೂ ಸಿದ್ದರಾಮಯ್ಯ ರಾಜ್ಯ ಕಂಡ ಮಹಾ ಮೋಸಗಾರ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾಂಗ್ರೆಸ್ ನಲ್ಲಿ ಮ್ಯೂಸಿಕಲ್ ಚೇರ್ ಆಡುತ್ತಿದ್ದೇವೋ, ಬೇರೆ ಆಡುತ್ತಿದ್ದೇವೋ.., ಆದರೆ ಅವರ ಪಕ್ಷದಲ್ಲಿ ಆಡುತ್ತಿರುವ ಆಟವನ್ನು ಏನೆಂದು ಕರೆಯುತ್ತಾರೆ ? ಸಿದ್ದರಾಮಯ್ಯನವರು ಕೊಟ್ಟ ಮಾತು ತಪ್ಪಿಲ್ಲ. ಅವರ ಅಧಿಕಾರ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದಾರೆ. ಅವರು ಪ್ರಮಾಣ ವಚನ ಸ್ವೀಕರಿಸಿ ಕೊಟ್ಟ ಮಾತನ್ನು ಶೇ.99ರಷ್ಟು ಉಳಿಸಿಕೊಂಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ, ಯಾವುದಾದರೂ ಮಾಧ್ಯಮದ ವೇದಿಕೆಯಲ್ಲಿ ಬರಲಿ. ನಾನು ಈ ವಿಚಾರವಾಗಿ ಅವರ ಜತೆ ಚರ್ಚೆ ಮಾಡುತ್ತೇನೆ’ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News