ಆಗಸ್ಟ್ ಪರೀಕ್ಷೆಗೆ ಅವಕಾಶ: ಕೊರಟಗೆರೆ ವಿದ್ಯಾರ್ಥಿನಿಗೆ ಸಚಿವ ಸುರೇಶ್ ಕುಮಾರ್ ಭರವಸೆ

Update: 2021-07-17 18:23 GMT

ಬೆಂಗಳೂರು, ಜು. 17: `ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್‍ಗೆ ಆಗಸ್ಟ್‍ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು' ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಂದಿಲ್ಲಿ ಭರವಸೆ ನೀಡಿದ್ದಾರೆ. 

ಶನಿವಾರ ಮುಂಜಾನೆಯೇ ಕೊರಟಗೆರೆ ತಾಲೂಕಿನ ಹನುಮಂತಾಪುರ ಗ್ರಾಮದ ಗ್ರೀಷ್ಮಾ ಎನ್.ನಾಯಕ್ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, `ಗ್ರೀಷ್ಮಾ ನಾಯಕ್ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿದಲ್ಲವಾದ್ದರಿಂದ ನಿಯಮಾನುಸಾರ ಜುಲೈನಲ್ಲಿ ನಡೆಯಲಿರುವ ಪರೀಕ್ಷೆಗೆ ಹಾಜರಾಗಲು ಅವಕಾಶವಿಲ್ಲ. ಮುಂದಿನ ತಿಂಗಳು ನಡೆಯಲಿರುವ ಪೂರಕ ಪರೀಕ್ಷೆಗೆ ಹಾಜರಾಗಲು ಆಕೆಗೆ ಖಚಿತ ಅವಕಾಶ ನೀಡಿ ಉತ್ತೀರ್ಣಗೊಳಿಸುವುದಲ್ಲದೆ ಪಿಯು ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು' ಎಂದು ತಿಳಿಸಿದರು.

`ಸದರಿ ವಿದ್ಯಾರ್ಥಿನಿ ಪೂರಕ ಪರೀಕ್ಷೆಗೆ ಹಾಜರಾಗಲು ಪರೀಕ್ಷೆಗೆ ಹೆಸರು ನೋಂದಾಯಿಸುವುದು, ಫಲಿತಾಂಶದ ನಂತರ ಇದೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿನಿಗೆ ಪಿಯುಸಿ ತರಗತಿಗೆ ಸೇರ್ಪಡೆಗೊಳಿಸುವುದು ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳದಲ್ಲಿ ಹಾಜರಿದ್ದ ಮಧುಗಿರಿ ಡಿಡಿಪಿಐಗೆ ಸುರೇಶ್ ಕುಮಾರ್ ಅವರು ಸ್ಥಳದಲ್ಲೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

`ಇದೇ ಸಾಲಿನಲ್ಲಿ ನಿನ್ನನ್ನು ಪಿಯುಸಿಗೆ ಸೇರ್ಪಡೆಗೊಳಿಸುವುದು ನಾನು ಜವಾಬ್ದಾರಿ. ಮುಂದಿನ ತಿಂಗಳು ನಡೆಯಲಿರುವ ಪರೀಕ್ಷೆ ಹಾಜರಾಗಲು ಅವಕಾಶವಿರುವುದರಿಂದ ಯಾವುದೇ ಕಾರಣಕ್ಕೂ ಮನಸ್ಸಿಗೆ ಬೇಸರ ಮಾಡಿಕೊಳ್ಳದೇ ಉತ್ತಮ ಅಂಕಗಳನ್ನು ಪಡೆಯಲು ಶ್ರಮವಹಿಸಿ ಅಭ್ಯಾಸದ ಕಡೆ ಗಮನ ಹರಿಸಬೇಕು. ಪರೀಕ್ಷೆಗೆ ಚೆನ್ನಾಗಿ ಓದುವುದಷ್ಟೇ ನೀನು ಮಾಡಬೇಕಾದ ಕೆಲಸ' ಎಂದು ಸುರೇಶ್ ಕುಮಾರ್ ವಿದ್ಯಾರ್ಥಿನಿಗೆ ಕಿವಿಮಾತು ಹೇಳಿ ಧೈರ್ಯ ತುಂಬಿದರು. ಈ ವೇಳೆ ವಿದ್ಯಾರ್ಥಿನಿಯ ಪೋಷಕರು ಹಾಜರಿದ್ದು, ಸಚಿವರು ತಮ್ಮ ಮನೆವರೆಗೂ ಆಗಮಿಸಿ ತಮ್ಮ ಪುತ್ರಿಗೆ ಧೈರ್ಯ ತುಂಬಿ ಭರವಸೆ ಮೂಡಿಸಿದ ಸಚಿವರಿಗೆ ಕೃತಜ್ಞಗೆ ಸಲ್ಲಿಸಿದರು. 

ವಿದ್ಯಾರ್ಥಿನಿ ಪರೀಕ್ಷೆಗೆ ಹೆಸರು ನೋಂದಾಯಿಸಿಲ್ಲ: ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಗ್ರೀಷ್ಮಾ 9ನೆ ತರಗತಿ ಉತ್ತೀರ್ಣಳಾದ ನಂತರ ಅವಳು ಶಾಲೆಗೆ ಹಾಜರಾಗಿಲ್ಲ, ಹಾಗೆಯೇ 10ನೆ ತರಗತಿ ಪರೀಕ್ಷೆ ನೋಂದಾಯಿಸಿಲ್ಲ. ಹಾಗಾಗಿ ಅವಳಿಗೆ ಜುಲೈನಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶವಾಗಿಲ್ಲ. ಆಗಸ್ಟ್‍ನಲ್ಲಿ ನಡೆಯಲಿರುವ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿ ಗ್ರೀಷ್ಮಾಗೆ ಅವಕಾಶ ನೀಡಲಾಗುವುದು ಎಂದರು.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಭಾಗದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರೂ, ಕೊನೆ ಕ್ಷಣದವರೆಗೂ ಮಂಡಳಿಗೆ ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಅವರ ಭಾವಚಿತ್ರವನ್ನು ನೀಡಿಲ್ಲ. ಭಾವಚಿತ್ರ ಒದಗಿಸುವುದು ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದ್ದು, ಫೋಟೋ ಒದಗಿಸದೇ ಇರುವುದರಿಂದ ಅವರಿಗೆ ಪ್ರವೇಶ ಪತ್ರಗಳು ಲಭ್ಯವಾಗಿಲ್ಲ. ಆ ಇಬ್ಬರೂ ವಿದ್ಯಾರ್ಥಿಗಳೊಂದಿಗೆ ಮತ್ತು ಸ್ಥಳೀಯ ಮುಖ್ಯೋಪಾಧ್ಯಾಯರೊಂದಿಗೆ ಮಾತನಾಡಿ ಎಲ್ಲ ವಿಷಯಗಳನ್ನೂ ಅರಿತುಕೊಂಡಿದ್ದೇನೆ. ಆ ಇಬ್ಬರು ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ಮಾಡಿಕೊಡಲಾಗುವುದು. ಪೂರಕ ಪರೀಕ್ಷೆಯಲ್ಲಿ ಭಾಗವಹಿಸಿದ ಮಕ್ಕಳಿಗೂ ಜುಲೈ ಪರೀಕ್ಷೆಯಂತೆಯೇ ಹೊಸ ವಿದ್ಯಾರ್ಥಿಗಳಿಗೆ ನೀಡುವ ಅಂಕಪಟ್ಟಿಯನ್ನೇ ನೀಡಲಾಗುವುದು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News