ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್
ಬೆಂಗಳೂರು, ಜು.19: ಕೋವಿಡ್ ಎರಡನೆ ಆತಂಕದ ನಡುವೆ ಹಾಗೂ ಹೊಸ ಮಾದರಿಯ ಪ್ರಶ್ನೆಪತ್ರಿಕೆಯೊಂದಿಗೆ ಇಂದು(ಸೋಮವಾರ) ನಡೆದ ಎಸೆಸೆಲ್ಸಿ ಮೊದಲ ದಿನದ ಗಣಿತ, ವಿಜ್ಞಾನ ಹಾಗೂ ಸಮಾಜ ವಿಷಯದ ಪರೀಕ್ಷೆಗೆ ಶೇ.99ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರೆಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ.
ಸೋಮವಾರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮೊದಲ ದಿನದ ಪರೀಕ್ಷೆ ಕುರಿತು ಮಾಹಿತಿ ನೀಡಿದ ಅವರು, ರಾಜ್ಯಾದ್ಯಂತ ಸುಮಾರು 4,885 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲ ರೀತಿಯ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಗೆ ಒಳಗಾದರು. ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತೆಂದು ತಿಳಿಸಿದ್ದಾರೆ.
ಗಣಿತ ವಿಷಯದಲ್ಲಿ ಒಟ್ಟು 8,52,191 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8,49,199(ಶೇ.99.64) ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 2,992 ಮಂದಿ ಗೈರಾಗಿದ್ದರು.ವಿಜ್ಞಾನ ವಿಷಯಕ್ಕೆ 8,43,976 ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8,40,841(ಶೇ.99.62) ಮಂದಿ ಹಾಜರಾಗಿ, 3,127 ಮಂದಿ ಗೈರಾಗಿದ್ದರು. ಸಮಾಜ ವಿಷಯಕ್ಕೆ 8,24,689 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8,21,823(ಶೇ.99.65) ಮಂದಿ ಹಾಜರಾಗಿದ್ದು, 2,867 ಮಂದಿ ಗೈರು ಹಾಗಿದ್ದರೆಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯಾದ್ಯಂತ 58ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆದಿದ್ದು, ಅದರಲ್ಲಿ ಬೆಂಗಳೂರು ಉತ್ತರ 1, ಬೆಂಗಳೂರು ದಕ್ಷಿಣ 2, ಮೈಸೂರು 1, ಮಂಡ್ಯ 4, ಉಡುಪಿ 3, ಮಂಗಳೂರು 14, ಕೊಡಗು-5, ಚಿತ್ರದುಗಗ7, ಚಿಕ್ಕಮಗಳೂರ 7, ಶಿವಮಗ್ಗ 1, ಹಾಸನ 3, ಗದಗ 1, ಬೆಳಗಾವಿ 2, ಉತ್ತರ ಕನ್ನಡ 5, ಕಲಬಗುರಿ 1, ಕೊಪ್ಪಳ 1 ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅನಾರೋಗ್ಯದಿಂದಾಗಿ ವಿಶೇಷ ಕೊಠಡಿಯಲ್ಲಿ 111 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 2,870 ಮಂದಿ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಉಳಿದು ಪರೀಕ್ಷೆ ಎದುರಿಸಿದ್ದಾರೆ. ಹಾಗೂ 10,693 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವನ್ನು ಬದಲಾಯಿಸಿಕೊಂಡು ತಮ್ಮ ಸಮೀಪದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯದ 760 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆಂದು ಅವರು ತಿಳಿಸಿದ್ದಾರೆ.
ಕೆಲವೆಡೆ ಶಾಸಕರು ಮತ್ತು ಸಚಿವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಖುದ್ದಾಗಿ ಭೇಟಿ ನೀಡಿದ್ದಾರೆ ಮಕ್ಕಳನ್ನು ಹುರಿದುಂಬಿಸಿದ್ದಾರೆ. ಹಲವಾರು ಕಡೆಗಳಲ್ಲಿ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡಿದ್ದರು. ಅವರೆಲ್ಲರ ಪ್ರೋತ್ಸಾಹದಿಂದಾಗಿ ಎಸೆಸೆಲ್ಸಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ ಎಂದು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಪರೀಕ್ಷಾ ಸಮಯದಲ್ಲಿ ಕಂಡು ಬಂದ ವಿಶೇಷತೆಗಳನ್ನು ಸಚಿವರು ಈ ಸಂರ್ಭದಲ್ಲಿ ವಿವರಿಸಿದರು.
►ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್ನಲ್ಲಿಯೇ ಹಿಂದಿರುಗಿದರು.
► ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲಯದ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು.
ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿ.ಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು.
► ದಕ್ಷಿಣ ಕನ್ನಡ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಹಲವಾರು ಗಡಿ ಭಾಗದ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ ಒಟ್ಟು 770 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಒಬ್ಬ ನೊಂದಾಯಿತ ಅಭ್ಯರ್ಥಿ ಗೈರು ಹಾಜರಾಗಿದ್ದಾನೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.
►ಕಲಬುರ್ಗಿ ಜಿಲ್ಲೆಯ ಚಿಮ್ಮನಚೋಡ ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ತೀವ್ರ ಮಳೆಯಿಂದ ಶಾಲೆಗೆ ಹಾದು ಹೋಗುವ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿ ರಸ್ತೆ ಬಂದ್ ಅಗಿತ್ತು. ಅದನ್ನು ನಿಗದಿತ ಅವಧಿಯಲ್ಲಿ ಸರಿಪಡಿಸಲಾದ ಬಳಿಕ ಎಲ್ಲ ಮಕ್ಕಳು ರಸ್ತೆಯಲ್ಲಿ ಸಾಗಿ ಪರೀಕ್ಷೆ ಬರೆದರು.
► ಕೋಲಾರದ ಕುರುಬರ ಪೇಟೆಯ ನಿವಾಸಿ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 55 ವರ್ಷ ವಯಸ್ಸಿನ ಪರೀಕ್ಷೆಗೆ ಹಾಜರಾಗಿದ್ದುದು ವಿಶೇಷವಾಗಿತ್ತು. ಖಾಸಗಿ ಅಭ್ಯರ್ಥಿಯಾದ ಅವರು ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿದ್ದರಿಂದ ಈ ಬಾರಿ ಪುನರಾವರ್ತಿತ ಅಭ್ಯರ್ಥಿಯಾಗಿ ಕೋಲಾರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು.
► ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಘ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆ ಮಾಡಿದ್ದರು.
► ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆದ ಮಕ್ಕಳ ಉತ್ತರ ಪತ್ರಿಕೆಗಳನ್ನು ಪೊಲೀಸ್ ಕಣ್ಗಾವಲಿನಲ್ಲಿ ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಂದು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡಲಾಗಿದೆ.
► ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.
► ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ.
► ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ 1,19,469 ಮಂದಿ ಎಲ್ಲ ಸ್ತರದ ಸಿಬ್ಬಂದಿ ಲಸಿಕೆ ಪಡೆದಿದ್ದರು.
► ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.
► ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ.
►ಯಾವುದೇ ಅಭ್ಯರ್ಥಿ ಪರೀಕ್ಷಾ ಅವ್ಯವಹಾರದಲ್ಲಿ ತೊಡಗಿಲ್ಲ.
► ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ ಬರೆದ ಅಭ್ಯರ್ಥಿಗಳು- 111
► ಸನಿಹದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡ ವಲಸೆ ವಿದ್ಯಾರ್ಥಿಗಳು-10693
► ವಸತಿ ನಿಲಯಗಳಲ್ಲಿದ್ದು ಪರೀಕ್ಷೆ ಬರೆದವರು -2870
► ಮುಖ್ಯೋಪಾಧ್ಯಾಯರ ಲಾಗಿನ್ನಿಂದ ಪ್ರವೇಶ ಪತ್ರಗಳನ್ನು ವಿತರಿಸಲಾಗಿದೆ. ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೂ ಬಿಇಒ ಮತ್ತು ಡಿಡಿಪಿಐ ಹಂತದಲ್ಲಿ ಪ್ರವೇಶ ಪತ್ರ ವಿತರಿಸಲಾಗಿದೆ.
► ಹಾವೇರಿ ಜಿಲ್ಲೆಯ ಚಿಕ್ಕೇರೂರು ಶಾಲೆಯ 30 ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಿದ್ದರೂ ಶಾಲೆಯ ಶಿಕ್ಷಕರೊಬ್ಬರು ಶುಲ್ಕವನ್ನು ಮಂಡಳಿಗೆ ಪಾವತಿಸದೇ ಇರುವುದರಿಂದ 30 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಾಗಿಲ್ಲ. ಆ 30 ವಿದ್ಯಾರ್ಥಿಗಳು, ಬಾಗಲಕೋಟೆ ಜಿಲ್ಲೆಯ 3 ಮತ್ತು ಕೊರಟಗೆರೆ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್ ಅವರಿಗೆ ಮುಂದೆ ಆಗಸ್ಟ್ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.
► ಮಕ್ಕಳು ಸರತಿ ಸಾಲಿನಲ್ಲಿ ಸುರಕ್ಷಿತ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ನೇರವಾಗಿ ಪರೀಕ್ಷಾ ಕೇಂದ್ರದ ಆರೋಗ್ಯ ತಪಾಸಣಾ ಘಟಕಕ್ಕೆ ಭೇಟಿ ನೀಡಿ ಅಲ್ಲಿ ಜ್ವರ ಪರೀಕ್ಷೆಯ ನಂತರ ಪರೀಕ್ಷಾ ಕೇಂದ್ರದ ಮುಂದೆ ಹಾಕಲಾಗಿದ್ದ ಫಲಕದಲ್ಲಿ ತಮ್ಮ ಕೊಠಡಿ ಸಂಖ್ಯೆಯನ್ನು ನೋಡಿಕೊಂಡು ಪರೀಕ್ಷಾ ಕೊಠಡಿಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗಿತ್ತು.
► ಪರೀಕ್ಷಾ ಕೇಂದ್ರದಿಂದ ಹೋಗುವಾಗಲೂ ಸುರಕ್ಷಿತ ಅಂತರ ಕಾಯ್ದುಕೊಂಡಿದ್ದಾರೆ.
► ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.
► ನಾಲ್ಕು ಪರೀಕ್ಷಾ ಕೇಂದ್ರಗಳಿಗೆ ಮಹಾರಾಷ್ಟ್ರ ಭಾಗದ 152 ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದರು. ಅವರೆಲ್ಲರಿಗೂ ಗಡಿ ಭಾಗದಿಂದ ವಾಹನ ವ್ಯವಸ್ಥೆ ಮಾಡಲಾಗಿತ್ತು.
ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.