×
Ad

ಕೋವಿಡ್ ಸಂಭಾವ್ಯ ಮೂರನೇ ಅಲೆ ಎದುರಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ

Update: 2021-07-23 20:58 IST

ಮಂಗಳೂರು, ಜು.23: ಕೋವಿಡ್-19 ಸೋಂಕಿನ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲ ತಂಡಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿವೆ. ಸಂಭಾವ್ಯ ಮೂರನೇ ಅಲೆ ಎದುರಾದಲ್ಲಿ ಅದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

ನಗರದ ವೆನ್ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ಶಿಶು ವೈದ್ಯರ ಜಿಲ್ಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕೋವಿಡ್-19ನ 3ನೇ ಅಲೆ ತಡೆಗಟ್ಟುವಿಕೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್-19 ಕರ್ತವ್ಯ ನಿರ್ವಹಿಸುವ ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗೆ ತರಬೇತಿ ನೀಡುವ ಮೂಲಕ ಅವರಲ್ಲಿ ಮತ್ತಷ್ಟು ಆತ್ಮಸ್ಥೆರ್ಯ ಹೆಚ್ಚಿಸಬೇಕು. ಸಂಭಾವ್ಯ ಮೂರನೇ ಅಲೆಯಲ್ಲಿ ಮಕ್ಕಳಿಗೆ ಬರುವ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

ಸಮುದಾಯದ ಸಹಭಾಗಿತ್ವದೊಂದಿಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಆರೋಗ್ಯ, ಆಶಾ ಕಾರ್ಯಕರ್ತೆಯರ ಮೂಲಕ ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಬೇಕು. ಅವರ ಕ್ಷೇತ್ರ ಭೇಟಿಯ ಸಂದರ್ಭದಲ್ಲಿ 18 ವರ್ಷದೊಳಗಿನ ಎಲ್ಲ ಮಕ್ಕಳ ಸಾಮಾನ್ಯ ಆರೋಗ್ಯ ಸ್ಥಿತಿಯ ವಿವರಗಳನ್ನು ಪಡೆದು ವಿಶೇಷವಾಗಿ ಮಕ್ಕಳಲ್ಲಿ ಕಂಡುಬರುವ ತೀವ್ರತರದ ತೊಂದರೆಗಳನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಿ ಚಿಕಿತ್ಸೆ ನೀಡಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಮೇಲ್ದರ್ಜೆಯ ಆಸತ್ರೆಗೆ ಅವರನ್ನು ಕಳುಹಿಸಲು ವೈದ್ಯಾಧಿಕಾರಿಗಳ ಮೂಲಕ ಶಿಫಾರಸು ಮಾಡುವುದು ಅತಿ ಅಗತ್ಯ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಆರೋಗ್ಯ ಕೇಂದ್ರಗಳಿಗೆ ಚಿಕಿತ್ಸೆಗೆಂದು ಬರುವ ಮಕ್ಕಳಲ್ಲಿ ಸಾಮಾನ್ಯ ರೋಗಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆಗೆ ಮೊದಲ ಆದ್ಯತೆ ನೀಡಬೇಕು. ಆರೋಗ್ಯ ಹಾಗೂ ಆಶಾ ಕಾರ್ಯಕರ್ತರು ಕ್ಷೇತ್ರ ಭೇಟಿ ನೀಡುವ ಸಂದರ್ಭದಲ್ಲೂ ಮಕ್ಕಳಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಕೂಡಲೇ ಗುರುತಿಸಿ ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋವಿಡ್ ಸೋಂಕಿನ ಮೂರನೇ ಅಲೆಯನ್ನು ತಡೆಗಟ್ಟಲು ಎಲ್ಲರೂ ಸಜ್ಜಾಗಬೇಕು ಎಂದರು.

ಭಾರತೀಯ ಶಿಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಮುರಳಿ ಕೃಷ್ಣ ಮಾತನಾಡಿ, ಕೋವಿಡ್-19 ಸೋಂಕಿನ ಸಂಭಾವ್ಯ ಮೂರನೇ ಅಲೆ ತಡೆಗಟ್ಟುವಲ್ಲಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಶಿಶು ವೈದ್ಯರ ಸಂಘದಿಂದ ಸಂಪೂರ್ಣ ಸಹಕಾರವನ್ನು ನೀಡಲಾಗು ವುದು. ಈ ಬಗ್ಗೆ ತರಬೇತಿ ನೀಡುವ ಮೂಲಕ ವೈದ್ಯರ ತಂಡ ಕಾರ್ಯಪ್ರವೃತವಾಗಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ತಜ್ಞರಾದ ಡಾ. ಸ್ವಾತಿ ರಾವ್, ಕೆ.ಎಸ್. ಹೆಗ್ಡೆ, ಡಾ. ಸತೀಶ್‌ಚಂದ್ರ ಹಾಗೂ ಕೆ.ಎಂ.ಸಿಯ ಮಕ್ಕಳ ತಜ್ಞ ಡಾ. ಶರತ್ ತರಬೇತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸದಾಶಿವ ಶಾನ್‌ಬೋಗ್, ಐ.ಎ.ಪಿ ಅಧ್ಯಕ್ಷ ಡಾ. ಮುರಳಿಕೃಷ್ಣನ್, ಐಎಪಿ ರಾಷ್ಟ್ರೀಯ ಅಧ್ಯಕ್ಷ ಡಾ. ಸಂತೋಷ್ ಸೋನ್ಸ್, ಸದಸ್ಯ ಕಾರ್ಯದರ್ಶಿ ಡಾ. ಶ್ರೀಕೃಷ್ಣ ಭಾಗವಹಿಸಿದ್ದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News