ಮರವೂರು ಸೇತುವೆ ದುರಸ್ತಿ ಬಹುತೇಕ ಪೂರ್ಣ: ಜು. 30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

Update: 2021-07-26 13:50 GMT

ಮಂಗಳೂರು, ಜು.26: ಮಂಗಳೂರು- ಅತ್ರಾಡಿ ರಾಜ್ಯ ಹೆದ್ದಾರಿಯ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆ ಇತ್ತೀಚೆಗೆ ಕುಸಿದಿತ್ತು. ಸದ್ಯ ಸೇತುವೆ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆ ಇದೆ.

ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಕೆಲ ದಿನಗಳ ಹಿಂದೆಯೇ ಸೇತುವೆಯ ಪಿಲ್ಲರ್‌ನ್ನು ಮೇಲಕ್ಕೆ ಎತ್ತಿ ಯಥಾಸ್ಥಿತಿಗೆ ತರಲಾಗಿತ್ತು. ನಂತರ ವಾಹನ ಸಂಚಾರ ಸುಲಭವಾಗಲೆಂದು ಕೆಲವು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಇದೀಗ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಇದೇ ಜು.29ರಂದು ತಜ್ಞರ ಉಪಸ್ಥಿತಿಯಲ್ಲಿ ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಲು ರೋಡ್ ಟೆಸ್ಟ್ ನಡೆಸಲಾಗುತ್ತದೆ. ಈ ಪರೀಕ್ಷೆ ಯಶಸ್ವಿಯಾದರೆ ಶುಕ್ರವಾರದಿಂದಲೇ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮರವೂರು ಸೇತುವೆಯಲ್ಲಿ ಇತ್ತೀಚೆಗೆ ಭಾರೀ ಬಿರುಕು ಮೂಡಿ ಪಿಲ್ಲರ್ ಕುಸಿದಿದ್ದನ್ನು ಸ್ಥಳೀಯರೊಬ್ಬರು ಗಮನಿಸಿ ಮಾಹಿತಿ ರವಾನಿಸಿದ್ದರು. ಕೂಡಲೇ ಸೇತುವೆಯ ಎರಡೂ ಬದಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದರಿಂದ ಮಂಗಳೂರು ವಿಮಾನ ನಿಲ್ದಾಣ, ಬಜ್ಪೆ, ಕಟೀಲು, ಅದ್ಯಪಾಡಿ ಕಡೆಗೆ ತೆರಳುವರು ಸುತ್ತು ಬಳಸಿ ಹೋಗುವಂತಾಗಿತ್ತು. ಇದೀಗ ಸುಮಾರು ಒಂದೂವರೆ ತಿಂಗಳ ಬಳಿಕ ಸೇತುವೆ ಮತ್ತೆ ಸಂಚಾರಕ್ಕೆ ಮುಕ್ತವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ ಸ್ಥಳೀಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News