ವಸತಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಿ: ಉಡುಪಿ ಜಿಲ್ಲಾಧಿಕಾರಿ

Update: 2021-07-29 14:48 GMT

ಉಡುಪಿ, ಜು.29: ಜಿಲ್ಲೆಯಲ್ಲಿರುವ ವಸತಿಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಕುರಿತಂತೆ ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಹೆಚ್ಚಿನ ಮಾಹಿತಿಗಳನ್ನು ನೀಡುವಂತೆ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ವಸತಿಶಾಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ವಸತಿಶಾಲೆಗಳ ಪ್ರಾಂಶುಪಾಲರ, ನಿಲಯಪಾಲಕರ, ಕಂಪ್ಯೂಟರ್ ಶಿಕ್ಷಕರ ಮತ್ತು ಪ್ರಥಮ ದರ್ಜೆ ಸಹಾಯಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಾಜ್ಯ ಸರಕಾರ ಉಡುಪಿ ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ. ಉಡುಪಿ ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿಶಾಲೆಗಳ ಪ್ರಯೋಜನ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದವರು ತಿಳಿಸಿದರು.

ವಸತಿಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಸರಕಾರವು ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಶೂ, ಪಠ್ಯಪುಸ್ತಕ, ನೋಟ್‌ಪುಸ್ತಕ ಗಳನ್ನು ನೀಡುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಇದರ ಸ ುಪಯೋಗ ಪಡೆದುಕೊಳ್ಳುತಿದ್ದಾರೆ. ಉಡುಪಿ ಜಿಲ್ಲೆಯ ವಿದ್ಯಾರ್ಥಿ ಗಳೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

6ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾರ್ಗದರ್ಶನವನ್ನು ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಮಾಧ್ಯಮಗಳ ಮುಖಾಂತರ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ವ್ಯಾಪಕ ಪ್ರಾರ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪ್ರವೇಶ ಪರೀಕ್ಷಾಧಿಕಾರಿ ಹಾಗೂ ಸಮಾಜಕಲ್ಯಾಣ ಇಲಾಖೆ ಉಪನಿದೇಶಕಿ ಅನಿತಾ ಮಡ್ಲೂರ್, ಬಿಸಿಎಂ ಜಿಲ್ಲಾ ಮಟ್ಟದ ಅಧಿಕಾರಿ ದೇವೆಂದ್ರ ಬಿರಾದಾರ್, ಐಟಿಡಿಪಿ ಇಲಾಖೆ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್, ಡಿಡಿಪಿಐ ಎನ್.ಎಚ್ ನಾಗೂರ್, ಡಯಟ್ ಪ್ರಾಂಶುಪಾಲ್ ವೇದಮೂರ್ತಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಚಂದ್ರಶೇಖರ ಬಿ ಮತ್ತಿತರರು ಉಪಸ್ಥಿತರಿದ್ದರು.

ಸೆ.16ರಂದು ಪ್ರವೇಶ ಪರೀಕ್ಷೆ

ಕಾರ್ಕಳ ತಾಲೂಕಿನ ಮಿಯಾರು, ಕಾಪು ತಾಲೂಕಿನ ಕಳತ್ತೂರು, ಉಡುಪಿ ತಾಲೂಕಿನ ಹಿರೇಬೆಟ್ಟು, ಬ್ರಹ್ಮಾವರ ತಾಲೂಕಿನ ಆರೂರು, ಕುಂದಾಪುರ ತಾಲೂಕಿನ ಶಂಕರನಾರಾಯಣ, ಸಿದ್ದಾಪುರ, ಯಡ್ಯಾಡಿ-ಮತ್ಯಾಡಿ, ಬೈಂದೂರು ತಾಲೂಕಿನ ಹೆರಂಜಾಲುಗಳಲ್ಲಿ ಇರುವ ವಸತಿಶಾಲೆಗಳಲ್ಲಿ ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪ್ರವೇಶಕ್ಕಾಗಿ ಸೆಪ್ಟೆಂಬರ್ 16ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News