ಈಜಿಪುರ-ಕೋರಮಂಗಲ ಮೇಲ್ಸೇತುವೆ ಪೂರ್ಣಗೊಳಿಸದ ಕ್ರಮ ಪ್ರಶ್ನಿಸಿ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2021-07-29 16:23 GMT

ಬೆಂಗಳೂರು, ಜು.29: ನಗರದ ಈಜಿಪುರ ಹಾಗೂ ಕೋರಮಂಗಲ ನಡುವಿನ ಮೇಲ್ಸೇತುವೆ ನಿರ್ಮಾಣವನ್ನು 7 ವರ್ಷ ಕಳೆದರೂ ಪೂರ್ಣಗೊಳಿಸದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಕೋರಮಂಗಲ ನಿವಾಸಿ ಆದಿನಾರಾಯಣ ಶೆಟ್ಟಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲ ಎಚ್. ಸುನಿಲ್ ಕುಮಾರ್ ವಾದ ಆಲಿಸಿದ ಪೀಠ, ಬಿಬಿಎಂಪಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಕೇಂದ್ರ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಮೇಲ್ಸೇತುವೆ ನಿರ್ಮಾಣದ ಟೆಂಡರ್ ಪಡೆದಿರುವ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‍ನ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಮನವಿ ಏನು: ಟ್ರಾಫಿಕ್ ಸಮಸ್ಯೆ ತಪ್ಪಿಸಲು ಬಿಬಿಎಂಪಿ ನಗರದ ಈಜಿಪುರ ಜಂಕ್ಷನ್ ನಿಂದ ಕೋರಮಂಗಲದ ಕೇಂದ್ರೀಯ ಸದನದವರೆಗಿನ 2.5 ಕಿ.ಮೀ ಮೇಲ್ಸೇತುವೆ ನಿರ್ಮಿಸಲು ಯೋಜನೆ ರೂಪಿಸಿದೆ. ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಯೋಜನೆ ಜಾರಿ ಮಾಡಲು 157.66 ಕೋಟಿ ವೆಚ್ಚದ ಮೇಲ್ಸೇತುವೆ ಕಾಮಗಾರಿಗೆ ಬಿಬಿಎಂಪಿ 2014ರಲ್ಲಿ ಟೆಂಟರ್ ಕರೆದಿತ್ತು. ಬಳಿಕ ಈ ಟೆಂಡರ್ ಮೊತ್ತವನ್ನು 203.20 ಕೋಟಿ ರೂಪಾಯಿಗೆ ಹೆಚ್ಚಿಸಿ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್‍ಗೆ ಗುತ್ತಿಗೆ ನೀಡಿತ್ತು.

2017ರ ಮೇ 4ರ ಬಿಬಿಎಂಪಿ ಹಾಗೂ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ನಡುವಿನ ಗುತ್ತಿಗೆ ಒಪ್ಪಂದದ ಪ್ರಕಾರ 2019ರ ನವೆಂಬರ್ 4ಕ್ಕೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಗುತ್ತಿಗೆ ಪಡೆದ ಸಂಸ್ಥೆ ಕಾಮಗಾರಿ ಪೂರ್ಣಗೊಳಿಸದೆ, 2019ರಲ್ಲಿ ಮತ್ತೆ ಕಾಲಾವಕಾಶ ಕೇಳಿತ್ತು. ಅದನ್ನು ಪರಿಗಣಿಸಿ ಪಾಲಿಕೆ 2020ರ ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಿತ್ತು. ಹೆಚ್ಚುವರಿ ಕಾಲಾವಕಾಶ ನೀಡಿದರೂ ಕಾಮಗಾರಿ ಪೂರ್ಣಗೊಳಿಸದ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಮೇಲ್ಸೇತುವೆ ನಿರ್ಮಾಣಕ್ಕೆ ಕೇವಲ ಪಿಲ್ಲರ್‍ಗಳನ್ನμÉ್ಟೀ ನಿರ್ಮಿಸಿದ್ದು, ಪ್ರಸ್ತುತ ಕಾಮಗಾರಿ ಸ್ಥಗಿತಗೊಂಡಿದೆ, ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕಾಮಗಾರಿ ಪರಿಣಾಮ ಇಲ್ಲಿನ ವಾತಾವರಣವೂ ಕಲುಷಿತಗೊಂಡಿದೆ.

ಹೀಗಾಗಿ, ಕಾಮಗಾರಿಯನ್ನು ನಡೆಸಲು ಬೇರೊಂದು ಟೆಂಡರ್ ಕರೆದು ತ್ವರಿತವಾಗಿ ಮೇಲ್ಸೇತುವೆ ನಿರ್ಮಾಣವನ್ನು ಪೂರ್ಣಗೊಳಿಸಲು ಸರಕಾರ ಹಾಗೂ ಪಾಲಿಕೆಗೆ ನಿರ್ದೇಶಿಸಬೇಕು. ಈಗಿನ ಟೆಂಡರ್ ನ ವಿವರಗಳನ್ನು ನ್ಯಾಯಾಲಯ ಪರಿಶೀಲಿಸಬೇಕು. ಕಾಮಗಾರಿ ತಡವಾಗಿರುವುದರಿಂದ ನಿರ್ಮಾಣ ವೆಚ್ಚವೂ ಹೆಚ್ಚಾಗಲಿದ್ದು ಸಾರ್ವಜನಿಕರ ತೆರಿಗೆ ಪೋಲಾಗಲಿದೆ. ಹೀಗಾಗಿ, ನಿರ್ಮಾಣ ವೆಚ್ಚ ಹೆಚ್ಚಾಗಲು ಕಾರಣವಾಗಿರುವ ಸಂಸ್ಥೆಯಿಂದ ನಷ್ಟವನ್ನು ಅಂದಾಜು ಮಾಡಿ ವಸೂಲಿ ಮಾಡಲು ತಜ್ಞರ ಸಮಿತಿ ರಚಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News