ಮೀಸಲಾತಿ ಬಗ್ಗೆ ನಮಗೆ ಪಾಠ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಸಿದ್ದರಾಮಯ್ಯ

Update: 2021-07-30 13:10 GMT

ಬೆಂಗಳೂರು, ಜು.30: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ನೀಟ್ ಮೂಲಕ ಅಖಿಲ ಭಾರತ ಕೋಟಾದಡಿಯಲ್ಲಿ ಸೇರ್ಪಡೆಗೊಳ್ಳುವ ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡುವ ಪ್ರಧಾನಿ ನರೇಂದ್ರಮೋದಿ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಜುಲೈ ಮೂರರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಧಾನಮಂತ್ರಿಗೆ ಪತ್ರ ಬರೆದು ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆದಿದ್ದರು. ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಅಖಿಲ ಭಾರತ ಕೋಟಾದಡಿಯಲ್ಲಿ ಪಡೆದಿರುವ ಶೇ.15ರಷ್ಟು ಸೀಟುಗಳಲ್ಲಿಯೂ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು ಎಂದು ಅವರು ಹೇಳಿದ್ದಾರೆ.

ಮೀಸಲಾತಿ ನಿರಾಕರಣೆಯಿಂದಾಗಿ 2017ರಿಂದ 11000 ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿರುವುದನ್ನು ಸೋನಿಯಾಗಾಂಧಿ ಪತ್ರದಲ್ಲಿ ಉಲ್ಲೇಖಿಸಿ ಅಖಿಲ ಭಾರತ ಕೋಟಾದಲ್ಲಿಯೂ ಒಬಿಸಿಗಳಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಪಡಿಸಿದ್ದರು. ಇದಕ್ಕಾಗಿ ಸೋನಿಯಾಗಾಂಧಿಯವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನನ್ನ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ‘ಹತ್ತು ವರ್ಷ ಯುಪಿಎ ಸರಕಾರವಿದ್ದಾಗ ಒಬಿಸಿ ಮೀಸಲು ಬಗ್ಗೆ ಸೋನಿಯಾಗಾಂಧಿ ಅವರಿಗೆ ಜ್ಞಾನ ಇರಲಿಲ್ಲವೇ? ಎಂದು ಪ್ರಶ್ನಿಸಿದೆ’. ಬಿಜೆಪಿಯು ಬಡವರ, ರೈತರ, ದಲಿತರ, ಹಿಂದುಳಿದ ಜಾತಿಗಳ ವಿರೋಧಿ ಎನ್ನುವದು ನನಗೆ ಗೊತ್ತಿದೆ. ಆದರೆ ಈ ಪಕ್ಷ ಇಷ್ಟೊಂದು ಬೌದ್ಧಿಕ ದಿವಾಳಿತನದಿಂದ ಬಳಲುತ್ತಿದೆ ಎಂದು ಗೊತ್ತಿರಲಿಲ್ಲ. ಇತ್ತೀಚಿನ ಇತಿಹಾಸವನ್ನಾದರೂ ಸರಿಯಾಗಿ ಓದಿಕೊಂಡು ಪ್ರತಿಕ್ರಿಯಿಸಿ ಎಂದು ಅವರಿಗೆ ವಿನಯಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿ ನಾಯಕರ ಗಮನಕ್ಕಾಗಿ ಕೆಲವು ವಾಸ್ತವಾಂಶಗಳನ್ನು ಮುಂದಿಡಬಯಸುತ್ತೇನೆ. ಮೊದಲನೆಯದಾಗಿ, ದೇಶದಲ್ಲಿಯೇ ಮೊದಲ ಬಾರಿ ಅತ್ಯಂತ ವೈಜ್ಞಾನಿಕವಾದ ಎಲ್.ಜಿ.ಹಾವನೂರು ವರದಿಯ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ತಂದುಕೊಟ್ಟಿರುವುದು ರಾಜ್ಯದ ದೇವರಾಜ ಅರಸು ಅವರ ನೇತೃತ್ವದ ಕಾಂಗ್ರೆಸ್ ಸರಕಾರ ಎಂದು ಅವರು ತಿಳಿಸಿದ್ದಾರೆ.

ಎರಡನೆಯದಾಗಿ, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರಕಾರವಿದ್ದಾಗ ಸಂವಿಧಾನಕ್ಕೆ 104ನೇ ತಿದ್ದುಪಡಿ ಮಾಡಿ ಸರಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿರುವ ಐಐಟಿ ಮತ್ತು ಐಐಎಂ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಜಾರಿಗೆ ತರಲಾಯಿತು. ವಿ.ಪಿ.ಸಿಂಗ್ ಅವರು ಮಂಡಲ ವರದಿ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದ್ದರು. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದ ಅರ್ಜುನ್ ಸಿಂಗ್ ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಹಿಂದುಳಿದ ಜಾತಿಗಳಿಗೆ ಸಂವಿಧಾನಕ್ಕೆ 104ನೇ ತಿದ್ದುಪಡಿಯ ಮೂಲಕ ಮೀಸಲಾತಿ ಕಲ್ಪಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಸರಕಾರ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಾಗ ಅದನ್ನು ವಿರೋಧಿಸಿದ್ದು ಬಿಜೆಪಿ.  ಭಾರತೀಯ ಜನತಾ ಪಕ್ಷ ಸೈದ್ಧಾಂತಿಕವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಗೆ ವಿರುದ್ಧವಾಗಿರುವ ಪಕ್ಷ. ಆರೆಸೆಸ್ಸ್ ಸರಸಂಘ ಚಾಲಕ ಮೋಹನ್ ಭಾಗವತ ಅವರು ಬಹಿರಂಗವಾಗಿಯೇ ಮೀಸಲಾತಿ ವಿರೋಧಿಸಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು ಎಂದು ಸಿದ್ದರಾಮಯ್ಯ ಕಿಡಿಗಾರಿದ್ದಾರೆ.

ದಿವಂಗತ ನ್ಯಾಯಮೂರ್ತಿ ರಾಮಾಜೋಯಿಸ್ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದರು. ಹುಟ್ಟಿನಿಂದಲೇ ಮೀಸಲಾತಿ ವಿರೋಧಿಯಾದ ಬಿಜೆಪಿ ಈಗ ರಾಜಕೀಯ ಅನಿವಾರ್ಯತೆಗೆ ಸಿಕ್ಕಿ ಮೀಸಲಾತಿಯನ್ನು ಒಪ್ಪಿಕೊಂಡಿದೆ ಅನುಷ್ಠಾನ ನಮ್ಮದು ಬದ್ದತೆ, ಬಿಜೆಪಿಯದ್ದು ಆತ್ಮವಂಚನೆಯ ನಾಟಕ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಶೇ.15ರಷ್ಟು ಸೀಟುಗಳನ್ನು ಅಖಿಲ ಭಾರತ ಕೋಟಾಕ್ಕಾಗಿ ಕಿತ್ತುಕೊಂಡಿರುವುದೇ ಮಹಾದ್ರೋಹ. ಈ ನಿರ್ಧಾರವನ್ನು ಕೈಗೊಂಡಿದ್ದು ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ. ನಮ್ಮ ಭೂಮಿ, ನಮ್ಮವರ ತೆರಿಗೆ ಹಣದಿಂದ ನೀಡಿರುವ ವಿನಾಯಿತಿ-ರಿಯಾಯಿತಿಯಿಂದ ನಿರ್ಮಾಣಗೊಂಡ ವೈದ್ಯಕೀಯ ಕಾಲೇಜುಗಳ ಸೀಟನ್ನು ಬೇರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ಯಾಕೆ ಉಡುಗೊರೆಯಾಗಿ ನೀಡಬೇಕು? ಬಿಜೆಪಿ ನಾಯಕರು ಉತ್ತರಿಸಬೇಕಾಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.

ಅಖಿಲ ಭಾರತ ಕೋಟಾಕ್ಕಾಗಿ ರಾಜ್ಯದ ಮೆಡಿಕಲ್ ಕಾಲೇಜುಗಳ ಸೀಟುಗಳನ್ನು ಕೇಂದ್ರ ಸರಕಾರ ಕಿತ್ತುಕೊಳ್ಳುವುದನ್ನು ನಾನು ಮುಖ್ಯಮಂತ್ರಿಯಾಗಿರುವಾಗಲೇ ವಿರೋಧಿಸಿದ್ದೆ. ತಮಿಳುನಾಡು ಸರಕಾರ ಇದನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದೆ. ಅದರ ಮುಂದಿನ ವಿಚಾರಣೆ ಆಗಸ್ಟ್ 3ಕ್ಕೆ ಇದೆ. ನ್ಯಾಯಾಲಯದ ತೀರ್ಪಿನಿಂದ ಮುಖ ಉಳಿಸಿಕೊಳ್ಳಲು ನರೇಂದ್ರ ಮೋದಿ ಸರಕಾರ ಅಖಿಲ ಭಾರತ ಕೋಟಾದಡಿಯಲ್ಲಿಯೂ ಒಬಿಸಿಗಳಿಗೆ ಶೇ.27ರಷ್ಟು ಮೀಸಲಾತಿಯನ್ನು ಘೋಷಿಸಿದೆ ಎಂದು ಅವರು ಹೇಳಿದ್ದಾರೆ.

ಹಿಂದುಳಿದ ಜಾತಿಯ ಬಗ್ಗೆ ಪ್ರಧಾನಿಗಳ ಈ ಕಾಳಜಿಯ ನಾಟಕಕ್ಕೆ ಮುಂಬರುವ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯೂ ಕಾರಣವಾಗಿರಬಹುದು. ಉಳಿದಂತೆ ಪ್ರಧಾನಿಯವರ ಈ ಘೋಷಣೆಯಲ್ಲಿ ಯಾವುದೇ ಬದ್ಧತೆ ಇಲ್ಲ ಎಂದು ಸಿದ್ದರಾಮಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News