ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಮಂಡಿಸಿದ ಕಾಂಗ್ರೆಸ್
ಹೊಸದಿಲ್ಲಿ, ಜು.30: ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಸದನದ ದಾರಿತಪ್ಪಿಸಿರುವ ಕೇಂದ್ರ ಆರೋಗ್ಯ ಇಲಾಖೆಯ ಸಹಾಯಕ ಸಚಿವೆ ಭಾರತಿ ಪ್ರವೀಣ್ ಪವಾರ್ ವಿರುದ್ಧ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಮಂಡಿಸಿರುವುದಾಗಿ ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಹೇಳಿದ್ದಾರೆ. ಇದನ್ನು ಪರಿಶೀಲಿಸಿದ್ದು ಈ ಬಗ್ಗೆ ಸಚಿವೆಯ ಪ್ರತಿಕ್ರಿಯೆ ಕೇಳಲಾಗಿದೆ ಎಂದು ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಕೊರೋನ ಸೋಂಕಿಗೆ ಸಂಬಂಧಿಸಿದ ಸಾವಿನ ಪ್ರಕರಣಗಳ ಬಗ್ಗೆ ವರದಿ ಮಾಡಉ ಎಲ್ಲಾ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ವಿವರವಾದ ಮಾರ್ಗಸೂಚಿ ರವಾನಿಸಲಾಗಿದೆ. ಆದರೆ, ಆಮ್ಲಜನಕದ ಕೊರತೆಯಿಂದ ಸಾವು ಸಂಭವಿಸಿದೆ ಎಂದು ಯಾವುದೇ ರಾಜ್ಯ/ಕೇಂದ್ರಾಡಳಿತ ಪ್ರದೇಶ ಉಲ್ಲೇಖಿಲ್ಲ ಎಂದು ಸಚಿವೆ ಸದನಕ್ಕೆ ನೀಡಿದ್ದ ಲಿಖಿತ ಉತ್ತರದಲ್ಲಿ ತಿಳಿಸಿದ್ದರು. ಹಲವು ರಾಜ್ಯಗಳಲ್ಲಿ ಆಮ್ಲಜನಕದ ಕೊರತೆಯಿಂದ ಜನ ಯಾವ ರೀತಿ ಮೃತಪಟ್ಟಿದ್ದಾರೆ ಎಂಬುದನ್ನು ಎಲ್ಲರೂ ನೋಡಿದ್ದಾರೆ. ಆದರೂ ಸರಕಾರ ತಪ್ಪು ಮಾಹಿತಿ ನೀಡಿದೆ. ಆದ್ದರಿಂದ ನಿಯಮ 187ರಡಿ ಹಕ್ಕುಚ್ಯುತಿ ನೋಟಿಸ್ ನೀಡಿದ್ದೇನೆ ಎಂದು ವೇಣುಗೋಪಾಲ್ ಹೇಳಿದ್ದಾರೆ.