ಶಾಸಕ ಹಾಲಾಡಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಆಗ್ರಹ

Update: 2021-07-30 18:23 GMT

ಉಡುಪಿ, ಜು.30: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ 5 ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವ ಮೂಲಕ ಈ ಹಿಂದೆ ಬಿಜೆಪಿ ಮಾಡಿರುವ ತಪ್ಪನ್ನು ತಿದ್ದಿಕೊಳ್ಳುವುದಕ್ಕೆ ಅವಕಾಶ ಒದಗಿಬಂದಿದೆ. ಕುಂದಾಪುರ ಕ್ಷೇತ್ರ ಅಭಿವೃದ್ಧಿ ಕಾಣಬೇಕಾದರೆ ಹಾಲಾಡಿಯಂತಹ ಪ್ರಾಮಾಣಿಕರಿಗೆ ಮಂತ್ರಿಗಿರಿ ಕೊಡಬೇಕು ಎಂದು ಹಾಲಾಡಿ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಾಡಿ ಅಭಿಮಾನಿ ಸುಶಾಂತ್ ಅಚ್ಲಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಲಕ್ಷಾಂತರ ಮಂದಿ ಅಭಿಮಾನಿಗಳಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ನಾಯಕರಾಗಿರುವ ಅವರು, ಎಂದಿಗೂ ಜಾತಿ ರಾಜಕರಣ ಮಾಡಿಲ್ಲ ಮತ್ತು ಯಾವುದೇ ಹಗರಣದ ಆರೋಪ ಇಲ್ಲ ಎಂದರು.

ಕೀರ್ತಿಶ್ ಪೂಜಾರಿ ಕೋಟ ಮಾತನಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷದ ಸ್ಥಾನಮಾನಕ್ಕೆ ಜಾತಿ ರಾಜಕಾರಣ ಮಾಡಿಲ್ಲ. ಕುಂದಾಪುರದಲ್ಲಿ ಪ್ರತಾಪ್‌ಚಂದ್ರ ಶೆಟ್ಟಿ ಅವರನ್ನು ಸೋಲಿಸುವುದಕ್ಕೆ ಹಾಲಾಡಿ ರಾಜಕೀಯಕ್ಕೆ ಬರಬೇಕಾಯಿತು. ಮುಂದಿನ ಚುನಾವಣೆಯಲ್ಲಿ ಅವಕಾಶ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ. ಹಾಲಾಡಿ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗಲೇಬೇಕು. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಯುತ್ತಿದೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಯೋಗೀಶ್, ತೀರ್ಥನ್ ದೇವಾಡಿಗ ವಡ್ಡರ್ಸೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News