ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ: ರಣದೀಪ್ ಸಿಂಗ್ ಸುರ್ಜೇವಾಲ

Update: 2021-07-31 15:01 GMT

ಮೈಸೂರು,ಜು.31: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾದ ಮೇಲೆ ದಾಳಿ ನಡೆಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ ಶನಿವಾರ ಮೈಸೂರು ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿದ್ದ ಅವರು ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಜನಸಾಮನ್ಯರ ಮೇಲೆ ಗೌರವವಿಲ್ಲ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ.  ಚುನಾವಣಾ ಆಯೋಗ, ಸಿಬಿಐ, ಇಡಿ, ನ್ಯಾಯಾಂಗ ಸೇರಿದಂತೆ ಎಲ್ಲಾ ರಂಗಗಳನ್ನು ತನ್ನ ವಶಕ್ಕೆ ಪಡೆದುಕೊಂಡು ತಮಗೆ ಇಷ್ಟ ಬಂದ ರೀತಿಯಲ್ಲಿ ಹಿಡಿತ ಸಾಧಿಸುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿಯವರು ಭ್ರಷ್ಟಾಚಾರ, ಪಕ್ಷಾಂತರ ಮತ್ತು ನುಸುಳುವಿಕೆ ಮೂಲಕ ಕರ್ನಾಟಕದಲ್ಲಿ ಅಧಿಕಾರ ಹಿಡಿದಿದ್ದಾರೆ. ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಎಸಗಿದ್ದಾರೆ. ಅಧಿಕಾರಕ್ಕಾಗಿ ಯಾವ ರೀತಿಯಲ್ಲಿ ಪಕ್ಷಾಂತರ ಮಾಡಿಸಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಪೆಗಾಸಸ್, ಫೋನ್ ಕದ್ದಾಲಿಕೆ  ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರುಗಳ ಚಲನವಲನಗಳನ್ನು ಗಮನಿಸಿ ಅಧಿಕಾರ ಹಿಡಿದರು ಎಂದು ವಾಗ್ದಾಳಿ ನಡೆಸಿದರು.

ಮೋದಿ, ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರಿಗೆ ಹಿರಿಯರ ಮೇಲೆ ಗೌರವವಿಲ್ಲ, ಮೋದಿ ತಮ್ಮ ಗುರು ಎಂದು ಹೇಳುತ್ತಿದ್ದ ಲಾಲ್ ಕೃಷ್ಣ ಅಡ್ವಾನಿ ಅವರನ್ನು ಮೂಲೆ ಗುಂಪು ಮಾಡಿದರು. ಪಕ್ಷಕ್ಕಾಗಿ ದುಡಿದ ಮುರಳಿ ಮನೋಹರ ಜೋಷಿ, ಕೇಶುಬಾಯಿ ಪಟೇಲ್, ನರೇನ್ ಪಾಂಡ್ಯ, ಯಶವಂತ ಸಿನ್ಹಾ ಸೇರಿದಂತೆ ಅನೇಕ ನಾಯಕರುಗಳನ್ನು ಮೂಲೆ ಗುಂಪು ಮಾಡಿದರು. ಅದೇ ರೀತಿ ರಾಜ್ಯದಲ್ಲಿಯೂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಳಸಿಕೊಂಡು ಬಿಸಾಡಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ನೆರೆ ಹಾವಳಿ ಹೆಚ್ಚಾಗಿದೆ. ಪ್ರಾಣಹಾನಿ ಸಂಭವಿಸಿದೆ. ಸಾವಿರಾರು ಮನೆಗಳು ಜಲಾವೃತಗೊಂಡಿವೆ. ಲಕ್ಷಾಂತರ ಎಕರೆ ಬೆಳೆಗಳು ನಾಶವಾಗಿವೆ. ಆದರೆ ಇದೂವರೆಗೂ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿ ಪರಿಹಾರ ಘೋಷಣೆ ಮಾಡಿಲ್ಲ. ಅದೇ ಗುಜರಾತ್, ಬಿಹಾರಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸುತ್ತಾರೆ. ಇದರ ಅರ್ಥ ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆ ಗುಂಪು ಮಾಡುವುದು ಎಂದು ಆರೋಪಿಸಿದರು.

ಕೊರೋನ ಸಂಕಷ್ಟದಲ್ಲಿ ರಾಜ್ಯ ತತ್ತರಿಸಿಹೋಗಿದೆ. ಲಕ್ಷಾಂತರ ಮಂದಿ ಸಾವಿಗೀಡಾಗಿದ್ದಾರೆ. ಜನರಿಗೆ ಬೇಕಾದ ಅಕ್ಸಿಜನ್, ವೆಂಟಿಲೇಟರ್, ರೆಮ್ಡಿಸಿವಿರ್, ಸ್ಟಿರಾಯ್ಡ್ ಸೇರಿದಂತೆ ಅನೇಕ ಸೌಲಭ್ಯಬಳನ್ನು ಒದಗಿಸದೆ ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಸಂಕಷ್ಟದ ಸಮಯದಲ್ಲಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ಎಲ್ಲಿಗೆ ಹೋಗಿದ್ದಾರೆ ಎಂದು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಆರ್.ಧ್ರುವನಾರಾಯಣ್, ಸಲೀಂ ಅಹಮದ್, ಮಧು ಯಾಕ್ಷಿಗೌಡ, ಬ್ರಿಜೇಶ್ ಕಾಳಪ್ಪ. ವಿ.ಆರ್.ಸುದರ್ಶನ್, ಐಶ್ವರ್ಯ ಮಹದೇವ್ ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಭೆ: ರಣದೀಪ್ ಸಿಂಗ್ ಸುರ್ಜೇವಾಲ
ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ತುಮಕೂರು, ಹುಬ್ಬಳ್ಳಿ, ಮೈಸೂರಿನಲ್ಲಿ ವಿಭಾಗೀಯ ಮಟ್ಟದ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

ಕಾಂಗ್ರೆಸ್ ಪಕ್ಷ ಎಲ್ಲಾ ಜಾತಿ ಸಮುದಾಯದ ಪಕ್ಷ, ನಾವು ಒಂದು ಜಾತಿಗೆ ಸೀಮಿತರಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಅನ್ನಭಾಗ್ಯದಂತಹ ಮಹತ್ತರ ಯೋಜನೆ ಜಾರಿಗೆ ತಂದರು. ಇದು ಒಂದು ಸಮುದಾಯಕ್ಕೆ ಮೀಸಲಾಯಿತೇ. ಎಲ್ಲಾ ಬಡವರಿಗೂ ಅನುಕೂಲವಾಗಿದೆ. ಇದು ಕಾಂಗ್ರೆಸ್ ಪಕ್ಷ ಕಾರ್ಯಕ್ರಮ ಎಂದು ಹೇಳಿದರು.

ಬಿಜೆಪಿ ಪಕ್ಷದ ರಾಜಕೀಯ ದೌರ್ಬಲ್ಯವನ್ನು ಕಾಂಗ್ರೆಸ್ ಉಪಯೋಗಿಸುವುದಕ್ಕಿಂತ ನಮ್ಮ ಪಕ್ಷವನ್ನು ಸಂಘಟಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ ಪಕ್ಷ ಮುನ್ನಡೆಸುವ ಕೆಲಸ ಮಾಡಲಾಗುತ್ತದೆ. ನಮ್ಮಲ್ಲಿನ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News