ಕೋವಿಡ್ ನಿರ್ವಹಣೆ: ದ.ಕ. ಜಿಲ್ಲಾಧಿಕಾರಿಯನ್ನು ಪ್ರಶಂಸಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Update: 2021-07-31 15:57 GMT

ಮಂಗಳೂರು, ಜು.31: ಕೋವಿಡ್ ಸೋಂಕು ನಿರ್ವಹಣೆಯಲ್ಲಿ ದ.ಕ. ಜಿಲ್ಲಾಡಳಿತ ಕೈಗೊಂಡ ಕಠಿಣಾತಿ ಕಠಿಣ ಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸಿ ಡಾ. ರಾಜೇಂದ್ರ ಅವರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಯ ಗೃಹಕಚೇರಿಯಿಂದ ಶನಿವಾರ ಸಂಜೆ ನಡೆದ ವೀಡಿಯೊ ಸಂವಾದದಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಕೋವಿಡ್‌ಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅತ್ಯಂತ ಅಗತ್ಯವಿರುವ ಪ್ರಾಣವಾಯು ವೈದ್ಯಕೀಯ ಆಮ್ಲಜನಕದ 17 ಘಟಕಗಳು ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಅವುಗಳಲ್ಲಿ ಈಗಾಗಲೇ ಎಂಟು ಆಮ್ಲಜನಕ ಘಟಕಗಳ ಅನುಷ್ಠಾನ ಕಾರ್ಯ ಪೂರ್ಣಗೊಂಡಿದೆ. ಉಳಿದ ಘಟಕಗಳನ್ನು ಮುಂದಿನ ಎರಡು ವಾರಗಳಲ್ಲಿ ಪೂರ್ತಿಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಮುಖ್ಯಮಂತ್ರಿಯು ಡಿಸಿ ಡಾ.ರಾಜೇಂದ್ರ ಅವರ ಕೆಲಸಕ್ಕೆ ಅತೀವ ಶ್ಲಾಘನೆ ವ್ಯಕ್ತಪಡಿಸಿದರು.

ಕೊರೋನ ನಿರ್ವಹಣೆಯಲ್ಲಿ ಜಿಲ್ಲೆಯದ್ದು ಸವಾಲಿನ ಕೆಲಸ. ನೆರೆಯ ಕೇರಳದಲ್ಲಿ ಇದೀಗ ಕೋವಿಡ್ ಸೋಂಕಿನ ಪ್ರಕರಣಗಳೂ ವ್ಯಾಪಕವಾಗಿವೆ. ಅಲ್ಲಿಂದ ಪ್ರತಿನಿತ್ಯ ಹಲವು ಕಾರ್ಯಗಳಿಗೆ ರಸ್ತೆಯ ಮೂಲಕ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚು. ಆದ ಕಾರಣ ಸೋಂಕು ನಿಯಂತ್ರಿಸಲು ಮುಂಬರುವ 15 ದಿನಗಳ ಕಾಲ ಕಠಿಣಾತಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಯವರಿಗೆ ಸಿಎಂ ನಿರ್ದೇಶನ ನೀಡಿದರು.

ಅಲ್ಲದೆ, ಜಿಲ್ಲೆಯ ಗಡಿ ಭಾಗಗಳಲ್ಲಿ ತೆರೆಯಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು. ಅದಕ್ಕಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸುವಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ನಿರ್ದೇಶನ ನೀಡಿದರು.

ಗಡಿ ದಾಟುವ ಪ್ರತಿಯೊಬ್ಬರಲ್ಲಿಯೂ ನೆಗೆಟಿವ್ ವರದಿ ಇರಬೇಕು. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದಿರಬೇಕು. ಅವರ ಸಂಪರ್ಕವನ್ನು ಪತ್ತೆ ಹಚ್ಚಬೇಕು. ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಆಗಮಿಸುವವರಿಗೆ ಪ್ರತಿ 7 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್ ತಪಾಸಣಾ ಫಲಿತಾಂಶವನ್ನು ಪರಿಶೀಲಿಸಬೇಕು. ಪ್ರಮುಖವಾಗಿ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು. ಅಲ್ಲಿ ರ್ಯಾಟ್ ಟೆಸ್ಟ್ ಮಾಡಬೇಕು. ಹೆಚ್ಚು ಜನರು ರೈಲಿನ ಮೂಲಕ ಬರುವ ಕಾರಣ ಅಲ್ಲಿ ಕೋವಿಡ್ ಟೆಸ್ಟ್ ಮಾಡುವ ಕೌಂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದಲ್ಲಿ ದಂಡ ವಿಧಿಸಬೇಕು, ಮಾಸ್ಕ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗಡಿ ಭಾಗದ ತಪಾಸಣೆಗೆ ಪ್ರವಾಸ ಕೈಗೊಂಡು ಸ್ಥಿತಿ-ಗತಿಗಳನ್ನು ಅವಲೋಕಿಸುವು ದಾಗಿಯೂ ಅವರು ಹೇಳಿದರು.

ವೀಡಿಯೊ ಸಂವಾದದಲ್ಲಿ ಜಿಪಂ ಸಿಇಒ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಸಹಾಯಕ ಆಯುಕ್ತ ಮದನ್ ಮೋಹನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿಯ ಗೃಹಕಚೇರಿಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಸಂಬಂಧಿಸಿದಂತೆ ಬೆಂಗಳೂರು ನಗರ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು ಮತ್ತು ಉಡುಪಿ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಎಸ್ಪಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾಸರಗೋಡಿಗೆ ಒಂದು ವಾರ ಸಂಚಾರ ನಿಷೇಧ: ಸಿಎಂಗೆ ಮಾಹಿತಿ ನೀಡಿದ ಡಿಸಿ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಒಂದು ವಾರ ಕೇರಳ ರಾಜ್ಯದ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರವನ್ನು ನಿಷೇಧಿಸಲಾಗುತ್ತದೆ. ಅಲ್ಲಿಂದ ಬಂದಂತಹ ವಿದ್ಯಾರ್ಥಿಗಳನ್ನು ಒಂದು ವಾರ ಕ್ವಾರಂಟೈನ್ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಗಡಿ ಭಾಗದಲ್ಲಿ 12 ಕಡೆ ಚೆಕ್‌ಪೋಸ್ಟ್ ರಚಿಸಲಾಗಿದೆ. ಅದರಲ್ಲಿ 6 ರಸ್ತೆ ಹಾಗೂ 6 ರೈಲ್ವೆ ಸ್ಟೇಷನ್‌ಗಳಲ್ಲಿ, ಅವುಗಳಲ್ಲಿ ತಲಪಾಡಿ ಚೆಕ್‌ಪೋಸ್ಟ್ ಅತಿ ಮುಖ್ಯವಾದದ್ದಾಗಿದೆ. ಅಲ್ಲಿ 24x7 ಕಾಲ ತಪಾಸಣೆ ಮಾಡಲಾಗುತ್ತಿದೆ. ವೈದ್ಯಕೀಯ ತುರ್ತು ಸೇವೆಗೆ ಹೊರತು ಪಡಿಸಿ, ಇತರ ಸಂಚಾರವನ್ನು ನಿಷೇಧಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News