ಬೊಮ್ಮಾಯಿ ಅವರ ಸಂಪುಟದಲ್ಲಿ ನೂರಕ್ಕೆ ನೂರರಷ್ಟು ನಾನು ಇರುತ್ತೇನೆ: ಶಾಸಕ ಅರಗ ಜ್ಞಾನೇಂದ್ರ

Update: 2021-08-02 13:13 GMT

ಬೆಂಗಳೂರು, ಆ. 2: `ಸಚಿವ ಸಂಪುಟದಲ್ಲಿ ಖಂಡಿತವಾಗಿಯೂ ತಮಗೆ ಅವಕಾಶ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ' ಎಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ನೂರಕ್ಕೆ ನೂರರಷ್ಟು ನಾನು ಇರುತ್ತೇನೆ.

ಖಂಡಿತವಾಗಿಯೂ ನನಗೆ ಸಚಿವನಾಗುವ ಆಸೆಯಿದೆ. ಈ ಬಾರಿ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಕೈಬಿಡುವುದಿಲ್ಲ' ಎಂದು ತಿಳಿಸಿದರು.
`ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರಲ್ಲಿ ವಿಶೇಷತೆ ಏನೂ ಇಲ್ಲ. ಬೆಂಗಳೂರಿಗೆ ಬಂದಾಗಲೆಲ್ಲ ಅವರನ್ನು ಭೇಟಿ ಮಾಡುತ್ತೇನೆ.

ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಅನುಕಂಪವಿದೆ. ಅವರ ಜೊತೆಯಲ್ಲೇ ಪಕ್ಷ ಕಟ್ಟಿದ್ದೇನೆ. ಬೆಳೆದು ಬಂದಿದ್ದೇನೆ. ಹೀಗಾಗಿ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನ್ನನ್ನು ಖಂಡಿತವಾಗಿಯೂ ಪರಿಗಣಿಸುತ್ತಾರೆ. ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ' ಎಂದು ಅವರು ಹೇಳಿದರು.

ನವಲತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರು ನಾಲ್ಕು ಬಾರಿ ನನ್ನನ್ನು ಚುನಾಯಿಸಿದ್ದಾರೆ. ಹೀಗಾಗಿ ಸಚಿವನಾಗುವ ನಿರೀಕ್ಷೆ ಇದೆ. ತನಗೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಅರಗ ಜ್ಞಾನೇಂದ್ರ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News