ಬೆಳಗಾವಿ: ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ; ಗಡಿ ಭಾಗದಲ್ಲಿ ಕಟ್ಟೆಚ್ಚರ
Update: 2021-08-04 13:02 GMT
ಬೆಳಗಾವಿ, ಆ.4: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆ ಕಂಡಿರುವ ಹಿನ್ನೆಲೆ ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಚೆಕ್ ಪೋಸ್ಟ್ ಗೆ ಪೊಲೀಸ್ ಇಲಾಖೆಯ ಎಡಿಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಸಂಬಂಧ ನೆಗೆಟಿವ್ ವರದಿ ಹೊಂದಿರುವ ಆದೇಶ ಹಿನ್ನೆಲೆಯಲ್ಲಿ ಗಡಿಯಲ್ಲಿ ತಪಾಸಣೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾಡಳಿತ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಜನರು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯಕ್ಕೆ ಬರುವ ಮುನ್ನ ಕಡ್ಡಾಯ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರಲೇಬೇಕು. ತುರ್ತಾಗಿ ಕರ್ನಾಟಕ ಪ್ರವೇಶ ಮಾಡುವವರಿಗೂ ಕೂಡ ತಪಾಸಣೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ 23 ಚೆಕ್ ಪೋಸ್ಟ್ ಗಳ ಮೇಲೆ ನಿಗಾವಹಿಸಲಾಗಿದೆ ಎಂದು ಹೇಳಿದರು.