ತಂದೆಯ ಹಾದಿಯಲ್ಲೇ ಸಾಗುತ್ತೇನೆ: ಮಾಜಿ ಶಾಸಕ ಮಧು ಬಂಗಾರಪ್ಪ

Update: 2021-08-04 19:06 GMT

ಶಿವಮೊಗ್ಗ, ಆ.4: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ನಂತರ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಮಾಜಿ ಶಾಸಕ ಮಧುಬಂಗಾರಪ್ಪರಿಗೆ ಪಕ್ಷದ ಕಾರ್ಯಕರ್ತರು,ಮುಖಂಡರು ಭವ್ಯ ಸ್ವಾಗತ ಕೋರಿದರು.

 ಇದಕ್ಕೂ ಮುನ್ನ ಭದ್ರಾವತಿ ಬೈಪಾಸ್ ಸರ್ಕಲ್ ನಿಂದ ಅವರನ್ನು ಸ್ವಾಗತಿಸಲಾಯಿತು. ಮಲವಗೊಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಪಾರ ಬೆಂಬಲಿಗರೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಎಂ.ಆರ್.ಎಸ್. ಸರ್ಕಲ್ ನಿಂದ ಗೋಪಿ ವೃತ್ತದವರೆಗೆ ಆಗಮಿಸಿ ಅಲ್ಲಿ ಸ್ಥಾಪಿಸಿದ ಎಸ್. ಬಂಗಾರಪ್ಪ ಬೃಹತ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು,ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸೋಣ ಮತ್ತು ಅಧಿಕಾರಕ್ಕೆ ತರೋಣ ಎಂದರು.

ಬಡವರ ಉದ್ಧಾರ ಆಗುವುದೇ ಆದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನನಾಯಕರಾಗಿದ್ದ ನಮ್ಮ ತಂದೆ ಎಸ್. ಬಂಗಾರಪ್ಪ ಅವರೂ ಹಲವು ಯೋಜನೆಗಳನ್ನು ತಂದವರು. ಅಂತಹವರ ಮಗನಾದ ನಾನೂ ಅವರ ಹಾದಿಯಲ್ಲೇ ಸಾಗುತ್ತೇನೆ ಎಂದು ಹೇಳಿದರು.

ಕೇವಲ ಅಧಿಕಾರಕ್ಕಾಗಿ ಮಾತ್ರವಲ್ಲ, ಜನರ ಕಷ್ಟಗಳಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ. ಅಧಿಕಾರ, ಅಧಿಕಾರದ ಅಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರ ಮೂಲಕವೇ ಉತ್ತರ ಕೊಡೋಣ ಎಂದರು.

ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರೊಂದಿಗೆ ಸೇರಿಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸಿ ಜಿಲ್ಲೆಯಲ್ಲಿ ಕಳೆದುಕೊಂಡಿರುವ ಕಾಂಗ್ರೆಸ್ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸುತ್ತೇವೆ. ಈಗಿನ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತೇವೆ. ಬೇರುಮಟ್ಟದಿಂದ ಪಕ್ಷವನ್ನು ಬೆಳೆಸೋಣ. ಹೋರಾಟಗಳು ಅನಿವಾರ್ಯವಾದರೆ ಜಿಲ್ಲೆಯಿಂದಲೇ ಹೋರಾಟ ಮಾಡೋಣ ಎಂದರು.

 ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರನ್ನು ಕರೆಸಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಸಮಾವೇಶದ ಮೂಲಕ ಪಕ್ಷ ಸೇರಬೇಕು ಎಂದುಕೊಂಡಿದ್ದೆ. ಆದರೆ, ಕೋವಿಡ್ ಹಿನ್ನಲೆಯಲ್ಲಿ ಅದು ಸಾಧ್ಯವಾಗಲಿಲ್ಲ. ಆದರೂ ಇಂದು ಕಾಂಗ್ರೆಸ್ ನ ಎಲ್ಲ ನಾಯಕರು ನನ್ನನ್ನು ಪ್ರೀತಿಯಿಂದ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಪ್ರಾಥಮಿಕ ಸದಸ್ಯತ್ವವನ್ನು ಪಡೆದಿದ್ದೇನೆ. ನಿಮ್ಮ ಪ್ರೀತಿಗೆ ನನ್ನ ಕೃತಜ್ಞತೆಗಳು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಮಾತನಾಡಿ, ಮಧು ಬಂಗಾರಪ್ಪ ಪಕ್ಷಕ್ಕೆ ಬಂದಿರುವುದು ಮತ್ತಷ್ಟು ಬಲ ಬಂದಂತಾಗಿದೆ. ಅದಲ್ಲದೇ ಆರ್.ಎಂ. ಮಂಜುನಾಥಗೌಡರು ಕೂಡ ಪಕ್ಷಕ್ಕೆ ಬಂದಿದ್ದಾರೆ. ಈ ಎರಡೂ ಶಕ್ತಿಗಳನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಪ್ರಬಲವಾಗಿ ಸಂಘಟಿಸುವುದಾಗಿ ತಿಳಿಸಿದರು.

ಆಡಳಿತ ಪಕ್ಷದ ಹುನ್ನಾರಗಳನ್ನು, ಕೇಂದ್ರ, ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್, ಆರ್. ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಪ್ರಮುಖರಾದ ಆರ್.ಎಂ. ಮಂಜುನಾಥ ಗೌಡ, ಎಸ್.ಪಿ. ದಿನೇಶ್, ಶ್ರೀನಿವಾಸ್ ಕರಿಯಣ್ಣ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News