ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್

Update: 2021-08-05 12:29 GMT

ಹೊಸದಿಲ್ಲಿ, ಆ. 5: `ಎರಡು ವರ್ಷಗಳ ಹಿಂದಿನ ಐಎಂಎ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಕಾಂಗ್ರೆಸ್ ಶಾಸಕ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಅವರ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ನಡೆಸಿರುವ ದಾಳಿ ರಾಜಕೀಯ ಪ್ರೇರಿತ' ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಗುರುವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಅವರು ಬಹಳ ಹಿಂದೆಯೇ ಇಡಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಆದರೆ, ಎರಡು ವರ್ಷಗಳ ನಂತರ ದಿಲ್ಲಿ ಕಚೇರಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿರುವುದು ಆಶ್ಚರ್ಯ ಮೂಡಿಸಿದೆ' ಎಂದು ಪ್ರತಿಕ್ರಿಯೆ ನೀಡಿದರು.

`ಇದೊಂದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಕಾರಣ, ಬೆಂಗಳೂರಿನಲ್ಲೇ ಇಡಿ ಕಚೇರಿ ಇದೆ. ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಹಿತಾಸಕ್ತಿ ಪ್ರೇರಿತ ಪ್ರಕರಣವನ್ನು ದಿಲ್ಲಿಗೆ ವರ್ಗಾವಣೆ ಮಾಡಿಕೊಂಡು, ಸಂಬಂಧಪಟ್ಟವರಿಗೆ ರಾಜಕೀಯ ತೊಂದರೆ ನೀಡುವ ಪರಿಪಾಠವನ್ನು ಕೇಂದ್ರ ಸರಕಾರ ಪಾಲಿಸುತ್ತಾ ಬಂದಿದೆ. ಇದನ್ನು ನಾವು ಬಹಳ ಹತ್ತಿರದಿಂದ ಗಮನಿಸುತ್ತಿದ್ದೇವೆ. ಇದು ದ್ವೇಷದ ರಾಜಕಾರಣ' ಎಂದು ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.

`ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 41 ವರ್ಷಗಳ ನಂತರ ಭಾರತ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಇದು ನಮ್ಮೆಲ್ಲರಿಗೂ ಸಂತೋಷದ ವಿಚಾರವಾಗಿದ್ದು, ಇಡೀ ತಂಡಕ್ಕೆ ನಾವು ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ. ಇನ್ನು ಇತರೆ ಕ್ರೀಡಾಪಟುಗಳು ಸೆಮಿಫೈನಲ್ ಹಾಗೂ ಫೈನಲ್ ಸುತ್ತು ಪ್ರವೇಶಿಸಿದ್ದು, ಅವರಿಗೂ ಯಶಸ್ಸು ಸಿಗಲಿ, ಭಾರತದ ಪತಾಕೆ ಹಾರಲಿ ಎಂದು ಶುಭ ಹಾರೈಸುತ್ತೇನೆ' ಎಂದು ಸುರೇಶ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News