ಆ.11ರಿಂದ ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ : ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2021-08-05 15:06 GMT

ಮಂಗಳೂರು, ಆ. 5: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ತೀವ್ರಗೊಂಡ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಅನಗತ್ಯ ಸಂಚಾರವನ್ನು ರದ್ದು ಪಡಿಸಲಾಗಿದೆ. ಆದ ಕಾರಣ ಕೇರಳ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ 4 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ 11 ರಂದು ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಪದವಿ ಪರೀಕ್ಷೆಗಳಲ್ಲಿ ವಹಿಸಲಾದ ಅಸೈನ್‌ಮೆಂಟ್ ಗಳನ್ನು ಆನ್‌ಲೈನ್ ಅಥವಾ ಅಂಚೆ ಮೂಲಕ ಸಂಬಂಧಿಸಿದ ಕಾಲೇಜುಗಳೀಗೆ ತಲುಪಿಸಲು ಅವಕಾಶ ನೀಡಬೇಕು, ಪದವಿ ಪರೀಕ್ಷೆಗಳಿಗೆ ಹಾಜರಾಗಲು ಇಚ್ಛಿಸುವ ಕೋವಿಡ್ ಸೋಂಕಿತ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ 29,052 ಪದವಿ ವಿದ್ಯಾರ್ಥಿಗಳು, 5,493 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಕೇರಳದ 2000 ವಿದ್ಯಾರ್ಥಿಗಳು (ಪದವಿ ಪರೀಕ್ಷೆ) ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ, ಈ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಎಚ್ಚರ ವಹಿಸಬೇಕು. ಯಾವುದೇ ರೀತಿಯ ದಂಡವನ್ನು ವಿಧಿಸದಂತೆ ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ ಅವರು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ (ಪ) ಡಾ.ಪಿ.ಎಲ್. ಧರ್ಮ, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಡಾ.ಜಯಕರ ಭಂಡಾರಿ. ಎಂ, ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಕಾರ್ಯದರ್ಶಿ (ಎನ್.ಐ.ಸಿ) ಫಾರೂಕ್ ಬಾಯಬೆ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ದೇವಿಪ್ರಸಾದ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ನಿರ್ದೇಶನ ಮತ್ತು ಜಿಲ್ಲಾಧಿಕಾರಿಗಳ ಸಲಹೆಯಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದೂಡಲಾಗಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಆಗಸ್ಟ್‌ 11 ರಿಂದ ಕೊವಿಡ್‌ ಶಿಷ್ಟಾಚಾರದೊಂದಿಗೆ ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕಾಲೇಜಿನ ವೆಬ್‌ಸೈಟ್‌ ಮೂಲಕ ತಿಳಿಸಲಾಗುವುದು. ವಾಹನ ಸೌಲಭ್ಯ ಅಥವಾ ಕೋವಿಡ್‌ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News