ಬಿಬಿಎಂಪಿ ವ್ಯಾಪ್ತಿಯಲ್ಲಿ ಉಗುಳುವುದನ್ನು ನಿಲ್ಲಿಸಿ ಜಾಗೃತಿ ಜಾಥಾ
ಬೆಂಗಳೂರು, ಆ.6: ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ಎಲ್ಲೆಂದರಲ್ಲಿ ಉಗುಳುವುದರಿಂದ ಕೊರೋನ, ಕ್ಷಯರೋಗ ಹಾಗೂ ಇನ್ನಿತರೆ ರೋಗಗಳು ಹರಡಲಿವೆ ಎಂದು ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.
ಶುಕ್ರವಾರ ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸಿ(Stop Spitting) ಎಂಬ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಸದರಿ ಜಾಥಾವು ಬಿಬಿಎಂಪಿ, ರೋಟರಿ, ನಮ್ಮ ಬೆಂಗಳೂರು ಫೌಂಡೇಷನ್, ಬ್ಯೂಟಿಫುಲ್ ಬೆಂಗಳೂರು ಹಾಗೂ ಇನ್ನಿತರೆ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ನಗರದ ಟ್ರಾಫಿಕ್ ಸಿಗ್ನಲ್, ಬಸ್ ನಿಲ್ದಾಣ, ಬಸ್ ತಂಗುದಾಣ, ಮೀಡಿಯನ್ಸ್, ಉದ್ಯಾನ ಸೇರಿದಂತೆ ಇನ್ನಿತರೆ ಪ್ರಮುಖ ಸ್ಥಳಗಳಲ್ಲಿ ತಂಬಾಕು ಹಾಕಿಕೊಂಡು ಉಗಿದಾಗ ಅಲ್ಲಿ ಸ್ವಚ್ಛತೆ ಹಾಳಾಗುವುದರ ಜೊತೆಗೆ ಕೆಟ್ಟದಾಗಿ ಕಾಣುತ್ತದೆ. ಇದರಿಂದ ನಗರದ ಸೌಂದರ್ಯ ಹಾಳಾಗಲಿದೆ. ಈ ನಿಟ್ಟಿನಲ್ಲಿ ಎಲ್ಲೂ ಉಗುಳಬಾರದೆಂಬುದರ ಬಗ್ಗೆ ನಾಗರಿಕರಲ್ಲಿ ಹೆಚ್ಚು ಅರಿವು ಮೂಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ಬೈಲಾಸ್ನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸಬಹುದಾಗಿದೆ. ಕೋವಿಡ್ ಇರುವ ಹಿನ್ನೆಲೆಯಲ್ಲಿ ಮಾರ್ಷಲ್ಗಳು ಮಾಸ್ಕ್ ಧರಿಸದಿರುವ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಇರುವವರಿಗೆ ದಂಡ ವಿಧಿಸುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳದೆ ಇರುವುದನ್ನು ನಾಗರಿಕರು ಅಭ್ಯಾಸ ಮಾಡಿಕೊಂಡಾಗ ನಗರ ಸ್ವಚ್ಛವಾಗಿ ಕಾಣುವುದರ ಜೊತೆಗೆ ರೋಗಗಳು ಹರಡುವುದು ಕೂಡಾ ಕಡಿಮೆಯಾಗಲಿದೆ ಎಂದು ಅವರು ಹೇಳಿದ್ದಾರೆ.