ಕೋವಿಡ್ ಪಾಸಿಟಿವಿಟಿ ದರ ಇಳಿಕೆಗೆ ಕ್ರಮ ಕೈಗೊಳ್ಳಿ: ಸಚಿವ ಅಂಗಾರ
ಮಂಗಳೂರು, ಆ.6: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ದರವನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರಕಾರದ ಸಂಪುಟ ದರ್ಜೆಯ ಸಚಿವ ಎಸ್. ಅಂಗಾರ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಹಾಗೂ ಪಾಸಿಟಿವಿಟಿ ದರವನ್ನು ಕಡಿಮೆ ಮಾಡಲು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ತಪಾಸಣಾ ಗುರಿಗಳನ್ನು ಮತ್ತಷ್ಟು ಹೆಚ್ಚಿಸಿ ಕೊಳ್ಳಬೇಕು. ಅದಕ್ಕಾಗಿ ನಿಗದಿ ಪಡಿಸಿಕೊಂಡ ಗುರಿಯನ್ನಷ್ಟೇ ದೃಷ್ಟಿಯಲ್ಲಿಟ್ಟುಕೊಳ್ಳಬಾರದು. ಎಲ್ಲ ತಾಲೂಕುಗಳಲ್ಲಿಯೂ ವೈದ್ಯರು, ಲ್ಯಾಬ್ ಟೆಕ್ನಿಶಿಯನ್ ಹಾಗೂ ಎಎನ್ಎಂಗಳು ಇಲ್ಲ ಎನ್ನಬಾರದು. ಇಲ್ಲದಿದ್ದಲ್ಲಿ ಅವರ ನೇಮಕಾತಿ ಶೀಘ್ರದಲ್ಲಿಯೇ ಆಗಬೇಕು. ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅತ್ಯಗತ್ಯ ತಪಾಸಣಾ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.
ತಪಾಸಣೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮೊದಲು ಗಮನ ಹರಿಸಿ, ಅಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದರು. ಕೋವಿಡ್ ಸೋಂಕನ್ನು ಪತ್ತೆ ಹಚ್ಚಲು ಎಲ್ಲ ತಾಲೂಕುಗಳಲ್ಲಿಯೂ ನಿರಂತರವಾಗಿ ತಪಾಸಣೆ ಕೈಗೊಳ್ಳಬೇಕು. ಕೋವಿಡ್ ಪಾಸಿಟಿವ್ ಬಂದವ ರನ್ನು ಕಡ್ಡಾಯವಾಗಿ ಕೋವಿಡ್ ಸೆಂಟರ್ಗೆ ದಾಖಲಿಸಬೇಕು ಎಂದರು.
ಕೋವಿಡ್ ಹರಡದಂತೆ ಕ್ರಮ ಕೈಗೊಳ್ಳುವುದು, ಸೂಕ್ತ ರಕ್ಷಣೆ ಒದಗಿಸುವುದು ಹಾಗೂ ಹಾಗೂ ಚಿಕಿತ್ಸೆ ನೀಡುವುದು ರಾಜ್ಯ ಸರಕಾರದ ಮೂಲ ಉದ್ದೇಶ. ಕೋವಿಡ್ ಸೋಂಕಿನ ಅವಧಿಯಲ್ಲಿ ಅಧಿಕಾರಿಗಳು ವಿಳಂಬಕ್ಕೆ ಆಸ್ಪದ ನೀಡಬಾರದು. ಲ್ಯಾಬ್ ಟೆಕ್ನಿಶಿಯನ್ಗಳ ವೇತನದಲ್ಲಿ ವಿಳಂಬ ಆಗಬಾರದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕಿ, ಯು.ಟಿ. ಖಾದರ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋವಿಡ್ ಮೃತರಿಗೆ ಲಕ್ಷ ರೂ.: ಪಟ್ಟಿ ಸಿದ್ಧತೆಗೆ ಸೂಚನೆ
ಕೋವಿಡ್ ಸೋಂಕಿನಿಂದ ಮೃತ ಪಟ್ಟ ಬಿಪಿಎಲ್ ಕುಟುಂಬದವರಿಗೆ 1 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ರಾಜ್ಯ ಸರಕಾರದಿಂದ ಸುತ್ತೋಲೆ ಬಂದಿದ್ದು, ನಿಯಮಾನುಸಾರ ಪಟ್ಟಿ ತಯಾರಿಸಲು ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.