ಚಾರ್ಮಾಡಿ ಘಾಟ್ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ
ಮಂಗಳೂರು, ಆ.13: ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು-ತುಮಕೂರು ರಸ್ತೆಯ ಚಾರ್ಮಾಡಿ ಘಾಟ್ನಲ್ಲಿ ಆ.12ರಿಂದ ಅನ್ವಯಗೊಂಡಂತೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್ಸ್, ಆ್ಯಂಬುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು ದಿನದ 24 ಗಂಟೆಯೂ ಷರತ್ತುಗೊಳಪಟ್ಟು ಸಂಚರಿಸಬಹುದಾಗಿದೆ.
ಸಾರ್ವಜನಿಕರು ಸಂಚರಿಸುವ ಕೆಎಸ್ಸಾರ್ಟಿಸಿ, ಕೆಂಪು ಬಸ್, ಆರು ಚಕ್ರದ ಲಾರಿಗಳು ಬೆಳಗ್ಗೆ 6ರಿಂದ ಸಂಜೆ 7ರವರೆಗೆ ಮಾತ್ರ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆಎಸ್ಸಾರ್ಟಿಸಿ ರಾಜಹಂಸ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.