ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಭೇಟಿ
ಮಂಗಳೂರು, ಆ.14: ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಪ್ರದೇಶಕ್ಕೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಇಂದು ಭೇಟಿ ನೀಡಿ ಹೋರಾಟ ನಿರತ ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು.
ಕೋಸ್ಟಲ್ ಬರ್ತ್ ಕಾಮಗಾರಿಯು ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು ಮನೆಗಳನ್ನು ಪರಿಹಾರ ಇಲ್ಲದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಸಾಂಪ್ರದಾಯಿಕ ಮೀನುಗಾರರು ತಮ್ಮ ದೋಣಿಗಳನ್ನು ಯೋಜನಾ ಪ್ರದೇಶದಲ್ಲಿ ಲಂಗರು ಹಾಕಿ ಮೂರು ತಿಂಗಳಿನಿಂದ ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ನೇತೃತ್ವದಲ್ಲಿ ಕಾಮಗಾರಿ ತಡೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು.
ಇಂದು ಯೋಜನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಯೋಜನಾ ಪ್ರದೇಶ, ಸಾಂಪ್ರದಾಯಿಕ ದೋಣಿ ತಂಗುದಾಣ, ಪರ್ಯಾಯವಾಗಿ ಗುರುತಿಸಿರುವ ನದಿ ದಂಡೆ, ತೆರವುಗೊಳ್ಳಲಿರುವ ಮನೆಗಳಿರುವ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ಫೆರಿ ಬೋಟ್ ಮೂಲಕ ಕಸ್ಬಾ ಬೆಂಗ್ರೆಯಿಂದ ತೋಟಾ ಬೆಂಗ್ರೆ, ಅಳಿವೆ ಬಾಗಿಲು ಪ್ರದೇಶದವರಗೆ ನದಿಯಲ್ಲಿ ಸಂಚರಿಸಿ ಮೀನುಗಾರರಿಗೆ ಉಂಟಾಗುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ತಿಳಿದುಕೊಂಡರು.
ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಬೇಡಿಕೆಯಂತೆ ನಾಡದೋಣಿ ತಂಗಲು ನದಿ ದಂಡೆಯಲ್ಲಿ ಪರ್ಯಾಯ ಜಾಗ ಗುರುತಿಸುವಂತೆ ಹಾಗೂ ಅಲ್ಲಿಗೆ ಮೂಲಭೂತ ಸೌಲಭ್ಯಗಳ ಜೊತೆಗೆ ಬಂದರು ಇಲಾಖೆಯ ಅಧೀನದ ಆ ಜಮೀನನ್ನು ಮೂರು ದಿನಗಳ ಒಳಗಡೆ ಮೀನುಗಾರಿಕಾ ಇಲಾಖೆಗೆ ಹಸ್ತಾಂತರಿಸಿ ನಾಡದೋಣಿಗಳ ಅಧಿಕೃತ ತಂಗುದಾಣವಾಗಿ ಆದೇಶ ಹೊರಡಿಸುವಂತೆ ಸಹಾಯಕ ಕಮಿಷನರ್ ಹಾಗೂ ತಹಶೀಲ್ದಾರ್ಗೆ ಈ ಸಂದರ್ಭ ಜಿಲ್ಲಾಧಿಕಾರಿ ಸೂಚಿಸಿದರು.
ಮನೆಗಳನ್ನು ಕಳೆದುಕೊಳ್ಳಲಿರುವ ಎಂಟು ಕುಟುಂಬಗಳಿಗೆ ಗ್ರಾಮ ವ್ಯಾಪ್ತಿಯಲ್ಲಿಯೇ ಪುನರ್ವಸತಿ ಒದಗಿಸಲು ಬಂದರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ಒಳ ಸೇರಲಿರುವ ಮೀನು ಒಣಗಿಸುವ ಜಾಗದಲ್ಲಿ ವೃತ್ತಿ ನಿರತರಾಗಿದ್ದವರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋಸ್ಟಲ್ ಬರ್ತ್ನಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡಲು ಬೇಕಾದ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರು, ಹಕ್ಕು ಪತ್ರ, ಒಳಚರಂಡಿ ಯೋಜನೆಗಾಗಿ ಕ್ರಮಗಳನ್ನು ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಈ ಸಂದರ್ಭ ಉಪ ಆಯುಕ್ತ ಮದನ್ ಕುಮಾರ್, ತಹಶೀಲ್ದಾರ್ ಗುರು ಪ್ರಸಾದ್, ಬಂದರು ಇಲಾಖೆಯ ಉಪ ನಿರ್ದೇಶಕ ಮೂರ್ತಿ, ಕಾರ್ಯನಿರ್ವಾಹಕ ಅಧಿಕಾರಿ ಸುಜನ್ ಕುಮಾರ್, ಪಣಂಬೂರು ಎ ಸಿ ಪಿ ಮಹೇಶ್ ಕುಮಾರ್, ಇನ್ಸ್ಪೆಕ್ಟರ್ ಅಜ್ಮತ್ ಅಲಿ, ಮೀನುಗಾರಿಕೆ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮಸ್ಥರ ಪರವಾಗಿ ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷ ಅಬ್ದುಲ್ ತಯ್ಯೂಬ್ ಬೆಂಗ್ರೆ, ಪ್ರಮುಖರಾದ ಸಾದಿಕ್, ರಿಯಾಝ್, ಹಿದಾಯತ್, ಖಲೀಲ್ ಬೆಂಗ್ರೆ, ಜಮಾಅತ್ ಉಪಾಧ್ಯಕ್ಷ ಸುಲೈಮಾನ್ ಹಾಜಿ, ಮನಪಾ ಸದಸ್ಯ ಮುನೀಬ್ ಬೆಂಗ್ರೆ, ಡಿವೈಎಫ್ಐ ಮುಖಂಡರಾದ ನೌಷದ್ ಬೆಂಗ್ರೆ, ರಿಝ್ವಾನ್ ಬೆಂಗ್ರೆ, ತೌಸೀಫ್, ನಾಸಿರ್ ಮತ್ತಿತರರು ಉಪಸ್ಥಿತರಿದ್ದರು.