ಸದನಗಳು ಗರಡಿಗಳಾಗಿ ಮನೆಯಾಗಿ ಪರಿವರ್ತನೆಯಾಗುತ್ತಿವೆ: ಬಸವರಾಜ ಹೊರಟ್ಟಿ

Update: 2021-08-15 12:22 GMT

ಬೆಂಗಳೂರು, ಆ. 15: `ಇತ್ತೀಚಿನ ದಿನಗಳಲ್ಲಿ ಸಂಸದೀಯ ವ್ಯವಸ್ಥೆಯ ಮೌಲ್ಯಗಳನ್ನು ಕುಸಿಯುತ್ತಿವೆ ಎಂಬ ಅಪಸ್ವರ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪ್ರತಿನಿಧಿಗಳು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ' ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ಮಾಡಿದ್ದಾರೆ.

ರವಿವಾರ ಎಪ್ಪತ್ತೈದನೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಧಾನ ಮಂಡಲದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ನಮ್ಮ ಸದನಗಳು ಮಾತಿನ ಮನೆಯಾಗುವುದಕ್ಕಿಂತ `ಗರಡಿ ಮನೆ'ಗಳಾಗಿ ಪರಿವರ್ತನೆಯಾಗುತ್ತಿವೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ಈ ಕುರಿತು ಎಲ್ಲರೂ ಗಂಭೀರವಾಗಿ ಚಿಂತನೆ ಮಾಡುವ ಅಗತ್ಯವಿದೆ' ಎಂದು ಪ್ರತಿಪಾದಿಸಿದರು.

`ಇತ್ತೀಚಿನ ದಿನಗಳಲ್ಲಿ ನೈತಿಕ ತತ್ವ, ಸಿದ್ಧಾಂತಗಳು, ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಇವುಗಳ ಮರು ಸ್ಥಾಪನೆಯ ಬಗ್ಗೆ ಗಂಭೀರವಾಗಿ ಚಿಂತಿಸುವ ಅವಶ್ಯಕತೆ ಇದೆ. ಆ ಮೂಲಕ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯ ಘನತೆ, ಗೌರವ ಎತ್ತಿಹಿಡಿಯುವ ನಿಟ್ಟಿನಲ್ಲಿ ಎಲ್ಲ ಹಂತದ ಜನಪ್ರತಿನಿಗಳು, ಸಮಾಜ ಸೇವಕರು ಮುಂದಾಗಿ ಸಂಸದೀಯ ವ್ಯವಸ್ಥೆಯಲ್ಲಿ ಸತ್ಸಂಪ್ರದಾಯ ಪಾಲಿಸಬೇಕಾಗಿದೆ' ಎಂದು ಬಸವರಾಜ ಹೊರಟ್ಟಿ ಸೂಚನೆ ನೀಡಿದರು.

`ರಾಜಕಾರಣದಲ್ಲಿ ಹೆಚ್ಚಾಗುತ್ತಿರುವ ಅಪರಾಕರಣಕ್ಕೆ ಇತಿಶ್ರೀ ಹಾಡುವ ಮೂಲಕ ಮುಂದಿನ ಪೀಳಿಗೆಯಲ್ಲಿ ರಾಜಕೀಯ ನೈತಿಕತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ಬಿತ್ತಬೇಕು. ಭಾರತ ಸ್ವತಂತ್ರ ರಾಷ್ಟ್ರವಾಗಿ 75 ವರ್ಷಗಳನ್ನು ಕಾಣುತ್ತಿದೆ. ಇದು ನಮಗೆಲ್ಲ ಹೆಮ್ಮೆಯ ವಿಷಯ. ಧರಣಿ, ಸತ್ಯಾಗ್ರಹ, ಅಸಹಕಾರ ಚಳವಳಿ, ಉಪ್ಪಿನ ಸತ್ಯಾಗ್ರಹ, ಜೈಲ್‍ಭರೋ, ಕ್ವಿಟ್ ಇಂಡಿಯಾ, ಹೀಗೆ ಹತ್ತಾರು ವೈವಿಧ್ಯಮಯ ಸಂಘರ್ಷಗಳ ಮೂಲಕ ಪಡೆದ ಸ್ವಾತಂತ್ರ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ಮನವರಿಕೆ ಮಾಡಿಕೊಡುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ' ಎಂದು ಹೊರಟ್ಟಿ ಹೇಳಿದರು.

ಕೋವಿಡ್ ಮೂರನೇ ಅಲೆ ಭೀತಿಯಲ್ಲಿ ನಾವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗೋಣ ಎಂದ ಅವರು, ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಯಂತಹ ಸವಾಲುಗಳ ಸಮರ್ಪಕ ನಿರ್ವಹಣೆಯೊಂದಿಗೆ ಜನಸಾಮಾನ್ಯರ ಕಲ್ಯಾಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಗಳ ಯೋಜನೆಯ ಲಾಭ ಅರ್ಹರಿಗೆ ತಲುಪಿಸುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ' ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News