ಮಳೆ ನೀರು ಕೊಯ್ಲುನಿಂದ ಅಂತರ್ಜಲ ಸಮಸ್ಯೆಗೆ ಪರಿಹಾರ: ರೆಬೆಲ್ಲೊ
ಬ್ರಹ್ಮಾವರ, ಆ.16: ಜಲಜಾಗೃತಿಯ ಕೊರತೆಯಿಂದಾಗಿ ಅತ್ಯಂತ ಹೆಚ್ಚು ಮಳೆ ಬೀಳುವ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳೂ ಸಹ ನೀರಿನ ಸಮಸ್ಯೆ ಎದುರಿಸುತ್ತಿರುವುದು ಕಳವಳಕಾರಿಯಾಗಿದೆ. ಪ್ರತಿಯೊಬ್ಬರೂ ಮಳೆ ನೀರು ಕೊಯ್ಲು ಅಳವಡಿಸಿಕೊಂಡಲ್ಲಿ ಅಂತರ್ಜಲ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ ಎಂದು ಜಲತಜ್ಞ ಜೋಸೆಫ್ ರೆಬೆಲ್ಲೋ ತಿಳಿಸಿದ್ದಾರೆ.
ಉಡುಪಿ ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪುಣ್ಯ ಕೋಟಿ ಸಂಸ್ಥೆ ಮತ್ತು ಕಾಡೂರು ಗ್ರಾಪಂ ವತಿಯಿಂದ ಕಾಡೂರು ಗ್ರಾಪಂನಲ್ಲಿ ಜರಗಿದ ಮಳೆನೀರು ಕೊಯ್ಲು ಕಲಿಕಾ ಭೇಟಿ ಹಾಗೂ ಪ್ರಾತ್ಯಕ್ಷಿಕೆ ಮತ್ತು ಘನ ಸಂಪನ್ಮೂಲ ನಿರ್ವಹಣೆ ಕುರಿತ ತರಬೇತಿ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತಿದ್ದರು.
ಕಾಡೂರು ಗ್ರಾಪಂ ಅಧ್ಯಕ್ಷ ಪಾಂಡುರಂಗ ಶೆಟ್ಟಿ ನಡೂರು ಮಾತನಾಡಿ ಇಂತಹ ಕಲಿಕಾಭೇಟಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳಿಂದ ತ್ಯಾಜ್ಯ ವಿಲೇವಾರಿ ಹಾಗೂ ಜಲಸಂರಕ್ಷಣೆ ನಿಟ್ಟಿನಲ್ಲಿ ಮಾಹಿತಿ ವಿನಿಮಯ ಹಾಗೂ ಅನುಷ್ಠಾನಕ್ಕೆ ಸಹಕಾರಿ ಎಂದು ತಿಳಿಸಿದರು.
ಕಾಡೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಮಾತನಾಡಿ ದರು. ಹೆಗ್ಗುಂಜೆ, ಕೊಕ್ಕರ್ಣೆ, ನೀಲಾವರ, ಹನೇಹಳ್ಳಿ ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನೀರು ನೈರ್ಮಲ್ಯ ಸಮಿತಿಯ ಸದಸ್ಯರು, ಪಿಡಿಓ ಗಳು ಮತ್ತು ಸಿಬ್ಬಂದಿ, ಪುಣ್ಯಕೋಟಿ ಗ್ರಾಮಾಭಿವೃದ್ಧಿ ಸಂಸ್ಥೆಯ ಪ್ರತಿನಿಧಿಗಳಾದ ನೇತ್ರಾವತಿ, ಪಾಂಡು, ದಿವಾಕರ್ ಮತ್ತು ಎಸ್ಎಲ್ಆರ್ಎಂ ಘಟಕದ ಮೇಲ್ವಿಚಾರಕರು ಮತ್ತು ಸಿಬ್ಬಂದಿ ಹಾಜರಿದ್ದರು.