×
Ad

ಮಂಗಳೂರು; ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Update: 2021-08-17 21:35 IST

ಮಂಗಳೂರು, ಆ.17: ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ಪ್ರಕಟಿಸಿದೆ.

ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಯಾನೆ ಮಮತಾ ಹಾಗೂ ಅದೇ ಗ್ರಾಮದ ಆನಂದ ಮೇರ ಶಿಕ್ಷೆಗೊಳಗಾದವರು. ಜಯರಾಜ್ ಕೊಲೆಯಾದವರು.

ಪ್ರಕರಣ ವಿವರ: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪೇರಮೊಗರಿನ ಜಯರಾಜ್ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. 2014ರಲ್ಲಿ ಅಶ್ವಿನಿ ಜೊತೆಗೆ ಜಯರಾಜ್ ಅವರ ವಿವಾಹವಾಗಿತ್ತು. ಮೂಡುಬಿದಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 2015ರಲ್ಲಿ ಅಶ್ವಿನಿ ಗರ್ಭವತಿಯಾಗಿ ತವರು ಮನೆಗೆ ಹೆರಿಗೆಗೆ ಹೋಗಿ 2016ರ ಆಗಸ್ಟ್ 6ರಂದು ತಾಯಿ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ಅಶ್ವಿನಿ ಅದೇ ಊರಿನ ಹಳೆ ಪರಿಚಯದ ಆನಂದ ಮೇರನೊಂದಿಗೆ ಸಂಬಂಧವಿರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಜಯರಾಜ್ ಮತ್ತು ಅಶ್ವಿನಿ ನಡುವೆ ವೈಮನಸ್ಸು ಉಂಟಾಗಿತ್ತು. ತಾಯಿ ಮನೆಯಲ್ಲಿದ್ದ ಅಶ್ವಿನಿ 2016ರ ಸೆಪ್ಟಂಬರ್ 13ರಂದು ಪತಿ ಜಯರಾಜ್‌ನನ್ನು ಸಂಚು ರೂಪಿಸಿ ಮನೆಗೆ ಕರೆಯಿಸಿ ಪ್ರಿಯಕರ ಆನಂದ ಮೇರನ ಜತೆ ಸೇರಿ ಜಯರಾಜ್‌ನನ್ನು ಕೊಲೆ ಮಾಡಲು ಮುಂದಾಗಿದ್ದರು. ಹಣ ನೀಡುವುದಾಗಿ ನಂಬಿಸಿ ಜಯರಾಜ್‌ನನ್ನು ಮನೆಗೆ ಕರೆದುಕೊಂಡಿದ್ದಳು. ನಂತರ ಆನಂದ ಮೇರನಿಗೂ ಮಾಹಿತಿ ನೀಡಿದ್ದಳು.

ಜಯರಾಜ್ ಅಂದು ಬೆಳಗ್ಗೆ 11:30ರ ವೇಳೆಗೆ ಮನೆಗೆ ಆಗಮಿಸಿದ್ದು, ಈ ವೇಳೆ ಆನಂದ ಮೇರ ಕಬ್ಬಿಣದ ರಾಡ್‌ನಿಂದ ಜಯರಾಜ್‌ನ ತಲೆಗೆ ಹೊಡೆದು, ಹಲ್ಲೆ ಮಾಡಿ ಅಶ್ವಿನಿ ಜತೆ ಸೇರಿ ಕೊಲೆ ಮಾಡಿದ್ದರು. ನಂತರ ಜಯರಾಜ್‌ನ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿ ಮನೆಯ ಹಿಂಬದಿಯಲ್ಲಿರುವ ಶಾಲೆಯ ಕಂಪೌಂಡ್‌ನ ಬಳಿ ಅಡಗಿಸಿಟ್ಟಿದ್ದರು.

ಜಯರಾಜ್‌ನ ಕಿಸೆಯಲ್ಲಿದ್ದ ಮೊಬೈಲ್ ಪೋನ್, ಎಟಿಎಂ ಕಾರ್ಡ್ ಇತ್ಯಾದಿ ವಸ್ತುಗಳನ್ನು ತೆಗೆದಿಟ್ಟುಕೊಂಡು ಗೋಣಿಚೀಲವನ್ನು ಸೊಪ್ಪುಗಳಿಂದ ಮುಚ್ಚಿ ಬಳಿಕ ಪಾಳುಬಾವಿಗೆ ಹಾಕಿದ್ದರು. ಮೃತದೇಹ ಕೊಳೆತಾಗ ವಾಸನೆ ಬಾರದ ಹಾಗೆ ರಾಸಾಯನಿಕ ವಸ್ತುವನ್ನು ಕೂಡ ಹಾಕಿದ್ದರು ಎನ್ನುವುದು ಬೆಳಕಿಗೆ ಬಂದಿತ್ತು.

ಪೊಲೀಸರ ದಿಕ್ಕು ತಪ್ಪಿಸಲು ಸುಳ್ಳು ದೂರು: ಕೊಲೆಯನ್ನು ಮರೆಮಾಚುವ ಉದ್ದೇಶದಿಂದ ಹಾಗೂ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ಅಶ್ವಿನಿ ತನ್ನ ಪತಿ ಕಾಣೆಯಾಗಿದ್ದಾರೆ ಎಂದು ಸೆ.16ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಅಪಹರಣ ನಾಟಕವಾಡಿದ್ದ ಆರೋಪಿಗಳು: ಕೊಲೆ ನಡೆಸಿದ ನಂತರ ಆರೋಪಿ ಆನಂದ ಮೇರನು ಜಯರಾಜ್‌ನನ್ನು ಅಪಹರಿಸಿರುವುದಾಗಿ ನಾಟಕ ಮಾಡುತ್ತಾನೆ. ಇದಕ್ಕೆ ಶ್ರೀಪತಿ ಮತ್ತು ಧನಪತಿ ಎಂಬವರು ಸಹಕರಿಸುತ್ತಾರೆ. ಜಯರಾಜ್‌ನ ಮೊಬೈಲ್‌ನ ಸಿಮ್ ಬಳಸಿ ಜಯರಾಜ್‌ನ ತಾಯಿಗೆ ಕರೆ ಮಾಡಿದ್ದ ಆರೋಪಿಗಳು ‘ಜಯರಾಜ್ ನಮಗೆ 62,000 ರೂ. ನೀಡಬೇಕಿತ್ತು. ಅದಕ್ಕಾಗಿ ಅವನನ್ನು ಕರೆದುಕೊಂಡು ಬಂದಿದ್ದೇವೆ. ಆತನಿಂದ ಬರಬೇಕಾದ ಹಣ ಬರುವವರೆಗೆ ಆತನನ್ನು ನಮ್ಮ ಜೊತೆ ದುಡಿಸಿ ಹಣ ವಸೂಲು ಮಾಡಿ ಬಳಿಕ ಕಳುಹಿಸುತ್ತೇವೆ’ ಎಂದು ಹೇಳುತ್ತಾರೆ.

ಆರೋಪಿಗಳು ಮಾಡಿದ ಪೋನ್ ಕರೆಯಿಂದ ಅನುಮಾನಗೊಂಡ ಜಯರಾಜ್ ಅವರ ಅಣ್ಣ ಗಿರೀಶ್ ಸೆ.22ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ತನ್ನ ತಮ್ಮನ ಅಪಹರಣದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ಅದು ಕೊಲೆ ಪ್ರಕರಣವೆಂದು ತಿಳಿಯುತ್ತದೆ.

ಮೂಡುಬಿದಿರೆ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಸಪ್ಪ ಬಾಲಪ್ಪ ಜಕಾತಿ ಅಭಿಯೋಜನಾ ಪರವಾಗಿ ಒಟ್ಟು 36 ಮಂದಿ ಸಾಕ್ಷಿದಾರರನ್ನು ವಿಚಾರಿಸಿದರು. ಆನಂದ ಮೇರ ಮತ್ತು ಅಶ್ವಿನಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5,000 ರೂ. ದಂಡ, ದಂಡದ ಹಣ ಪಾವತಿಸಲು ತಪ್ಪಿದರೆ ಜೈಲು ಶಿಕ್ಷೆ, ಸಾಕ್ಷನಾಶ ಪ್ರಕರಣಕ್ಕೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು. 10,000 ರೂ.ನ್ನು ಜಯರಾಜ್ ಅವರ ತಾಯಿಗೆ ನೀಡುವಂತೆ ಹಾಗೂ ಜಯರಾಜ್ ಅವರ ಮಗಳಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶಿಸಿ ತೀರ್ಪು ನೀಡಿದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ನಾರಾಯಣ ಶೇರಿಗಾರ್ ಯು. ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News