×
Ad

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ

Update: 2021-08-17 21:45 IST

ಬೆಂಗಳೂರು, ಆ.17: ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದುದರಿಂದ, ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯದಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಈಗಾಗಲೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತೂ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸೂಚಿಸಿದರು.

ಖಾಸಗಿಯವರ ಸಹಯೋಗ ಪಡೆದುಕೊಳ್ಳಬೇಕು. ರಾಜ್ಯದ ಜಿಇಆರ್(Gross Enrollment Ratio) ಶೇ.32ರಷ್ಟು ಇದ್ದು, ಮುಂದಿನ ದಿನಗಳಲ್ಲಿ ಇದನ್ನು ಶೇ.50ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಎಡ್., ಡಿ.ಎಡ್. ಪಠ್ಯ ವಿಷಯವನ್ನು ಇನ್ನಷ್ಟು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ಮುಖ್ಯಮಂತ್ರಿ ಸೂಚಿಸಿದರು.

ಯುವಕರು ಉದ್ಯೋಗ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು. ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯ್ಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News