ಜಾತಿಗಣತಿ ವರದಿ ಬಿಡುಗಡೆ ಮಾಡಲು ಪ್ರಭಾವಿಗಳು ಬಿಡಲಿಲ್ಲ: ಸಚಿವ ಈಶ್ವರಪ್ಪ

Update: 2021-08-20 14:15 GMT

ಶಿವಮೊಗ್ಗ,ಆ.20:ರಾಜ್ಯದ ಮೂಲೆ ಮೂಲೆ ಸುತ್ತಿ  ಹಿಂದುಳಿದ ವರ್ಗಗಳ ಬಗ್ಗೆ ಕಾಂತರಾಜ್ ಸಿದ್ಧಪಡಿಸಿದ ವರದಿಯನ್ನು ಬಿಡುಗಡೆ ಮಾಡಲು ಕೆಲವು ಪ್ರಭಾವಿಗಳು ಬಿಡಲಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದೇವರಾಜ ಅರಸು ಅವರ 116ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವರದಿ ಸ್ವೀಕಾರ ಮಾಡುವ ಹೊತ್ತಿಗೆ ಸಿದ್ದರಾಮಯ್ಯ ಸರಕಾರದ ಅವಧಿ ಮುಗಿದಿತ್ತು. ಬಳಿಕ ಬಂದ ಸಮ್ಮಿಶ್ರ ಸರಕಾರ ವರದಿ ಬಿಡುಗಡೆ ಮಾಡಬಹುದಿತ್ತು. ಆದರೆ ಅದರ ಬಗ್ಗೆ ಆಸಕ್ತಿಯನ್ನೇ ತೋರಲಿಲ್ಲ. ಕೋಟ್ಯಂತರ ರೂ. ವೆಚ್ಚ ಮಾಡಿ ಸಿದ್ಧಪಡಿಸಲಾಗಿದ್ದ ವರದಿ ಹಾಗೇ ಉಳಿಯುವಂತೆ ಮಾಡಲಾಗಿತ್ತು ಎಂದರು.

ಈಗ ಬಿಜೆಪಿ ಸರಕಾರ ಬಂದ ಬಳಿಕ ಆಯೋಗಕ್ಕೆ ಹೊಸ ಅಧ್ಯಕ್ಷರ ನೇಮಕವಾಗಿದೆ. ಕಡತ ಜಯಪ್ರಕಾಶ್ ಹೆಗಡೆಯವರ ಬಳಿ ಇದೆ. ಮುಂದೆ ಏನು ಮಾಡಬೇಕೆಂಬುದನ್ನು ಸರಕಾರ ಪರಿಶೀಲಿಸಲಿದೆ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗ, ದಲಿತರಿಗೆ ಅನ್ಯಾಯ ಮಾಡಲಾಗುತ್ತದೆ. ಮೀಸಲಾತಿ ತೆಗೆದು ಹಾಕಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಗಿತ್ತು. ಆದರೆ ಅಂತಹ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದರು.

ಹಿಂದುಳಿದ ವರ್ಗ, ದಲಿತರನ್ನು ಉದ್ದಾರ ಮಾಡುವುದಾಗಿ ಹೇಳಲಾಗುತಿತ್ತು. ಆದರೆ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ತರಲು ಮೋದಿ ಬರಬೇಕಾಯಿತು.  ವಾಜಪೇಯಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ ಕೈಗೊಂಡರೆ ಕೆಲವರು ಅದರ ವಿರುದ್ಧ ಕೋರ್ಟ್ ಗೆ ಹೋದರು. ಇದರಿಂದಾಗಿ ಬ್ಯಾಕ್ ಲಾಗ್ ಭರ್ತಿಗೆ ಹಿನ್ನಡೆಯಾಯಿತು ಎಂದರು.

ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ/ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ನಗರದ ಬಾಲರಾಜ್ ಅರಸು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ದೇವರಾಜ ಅರಸು ಭವನ ಪೂರ್ಣಗೊಳಿಸುವುದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು. ಭವನ ನಿರ್ಮಾಣಕ್ಕೆ ಅನೇಕ ಕಾನೂನು ಅಡೆತಡೆಗಳು ಇದ್ದವು. ಅದನ್ನೆಲ್ಲವನ್ನೂ ನಿವಾರಿಸಿ ನಂತರ ಅನುದಾನ ಬಿಡುಗಡೆ ಮಾಡಲಾಗಿತ್ತು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸುಮಾರು ಮೂರೂವರೆ ಕೋಟಿ ರು. ಗಳನ್ನು ಭವನ ನಿರ್ಮಾಣಕ್ಕೆ ಬಿಡುಗಡೆ ಮಾಡಿದ್ದರು. ಆದರೆ ಕಾರಣಾಂತರಗಳಿಂದ ನ್ಯಾಯಾಲಯದಲ್ಲಿ ಮೆಟ್ಟಿಲೇರಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಭವನ ಪೂರ್ಣಗೊಳಿಸುವುದಕ್ಕೆ ಎಲ್ಲ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.

ಎಂದ ಅವರು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಓ ವೈಶಾಲಿ, ವಿ. ರಾಜು ಮತ್ತಿತರರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News