×
Ad

ಸರಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪ: ನೋಡಲ್ ಅಧಿಕಾರಿಯಾಗಿ ಸುಧಾರಣಾ ಇಲಾಖೆ ಕಾರ್ಯದರ್ಶಿ ನೇಮಕ

Update: 2021-08-24 17:27 IST

ಬೆಂಗಳೂರು, ಆ.24: ಸರಕಾರಿ ನೌಕರರ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣಾ ವರದಿ ಆಧರಿಸಿ ಸರಕಾರ ಕೈಗೊಂಡ ಕ್ರಮಗಳ ಕುರಿತು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನು(ವಿಚಕ್ಷಣಾ) ನೋಡೆಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಸರಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಶಿಸ್ತು ಕ್ರಮ ಜರುಗಿಸಲು ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು ಸಲ್ಲಿಸಿರುವ ಶಿಫಾರಸು ವರದಿಗಳ ಅನ್ವಯ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. 

ಈ ವೇಳೆ, ಸರಕಾರದ ಪರ ವಕೀಲರು ಪೀಠಕ್ಕೆ ನೋಡೆಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜಂಟಿ ಕಾರ್ಯದರ್ಶಿ (ವಿಚಕ್ಷಣಾ) ಎಲ್. ಶಾರದಾ ಸಲ್ಲಿಸಿರುವ ಪ್ರಮಾಣ ಪತ್ರ ನೀಡಿದರು. ವರದಿ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತು. 

ಪ್ರಮಾಣ ಪತ್ರ: ದುರ್ನಡತೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಸರಕಾರಿ ನೌಕರರ ವಿರುದ್ಧ ವಿಚಾರಣೆ ನಡೆಸಿ ಕ್ರಮ ಜರುಗಿಸಲು ಶಿಫಾರಸು ಮಾಡಿ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು ಸಲ್ಲಿಸಿದ ವರದಿ ಆಧರಿಸಿ ಸಕ್ಷಮ ಪ್ರಾಧಿಕಾರ ಕೈಗೊಂಡ ಕ್ರಮಗಳ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮತ್ತು ಈ ವಿಚಾರದಲ್ಲಿ ಸಮನ್ವಯತೆ ಸಾಧಿಸಲು ಡಿಪಿಎಆರ್ ಜಂಟಿ (ವಿಚಕ್ಷಣ) ಕಾರ್ಯದರ್ಶಿಯನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಿದೆ. ಈ ಕುರಿತು 2021ರ ಆ.6ರಂದು ಆದೇಶ ಹೊರಡಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

ಅಲ್ಲದೇ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರ ಶಿಫಾರಸು ವರದಿ ಆಧರಿಸಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆ ಮತ್ತು ಸಕ್ಷಮ ಪ್ರಾಧಿಕಾರಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಕ್ಷಣಾ ವಿಭಾಗವು ಪತ್ರ ಬರೆದಿದೆ. ಈವರೆಗೆ 24 ಇಲಾಖೆಗಳ ಪೈಕಿ 14 ಇಲಾಖೆಗಳಿಂದ ವರದಿ ಬಂದಿದೆ. 10 ಇಲಾಖೆಗಳಿಂದ ವರದಿ ಬರಬೇಕಿದೆ ಎಂದು ಪ್ರಮಾಣ ಪತ್ರದಲ್ಲಿ ಸರಕಾರ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News