ಮಹಿಳಾ ದೌರ್ಜನ್ಯದ ವಿರುದ್ಧ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಹೆಬ್ರಿ, ಆ.28: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹೇಯ, ಅಮಾನವೀಯ ಕೃತ್ಯವಾಗಿದ್ದು ಇದನ್ನು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಈ ಘಟನೆ ನಡೆದು ನಲವತ್ತೆಂಟು ಗಂಟೆಗಳ ಬಳಿಕವೂ ಪೊಲೀಸ್ ಇಲಾಖೆ ಎಫ್ಐಆರ್ ದಾಖಲಿಸದೆ ಕರ್ತವ್ಯಲೋಪ ಎಸಗಿದೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಹೆಬ್ರಿಯ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರುಗಡೆ ರಾಜ್ಯ ಸರಕಾರದ ಕಾನೂನು ಸುವ್ಯವಸ್ಥೆ ವೈಫಲ್ಯವನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ರಾಜ್ಯದ ವಿದ್ಯಾರ್ಥಿನಿಯರು, ಮಹಿಳೆಯರು, ಮಕ್ಕಳು ಮತ್ತು ಜನಸಾಮಾನ್ಯ ರಿಗೆ ಈ ಸರಕಾರದಿಂದ ನ್ಯಾಯ ದೊರಕುತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟು ಸರಕಾರದ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಮೈಸೂರಲ್ಲಿ ನಡೆದ ಘಟನೆ ಮರುಕಳಿಸದಂತೆ ರಾಜ್ಯಪಾಲರು ತಾವೇ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಸರಕಾರವನ್ನು ವಜಾಗೊಳಿಸಬೇಕು ಎಂದವರು ಒತ್ತಾಯಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಮಹಿಳೆಯರು ಹಾಗೂ ವಿದ್ಯಾರ್ಥಿ ಗಳ ಮೇಲೆ ನಿರಂತರವಾಗಿ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದೆ.ಮೈಸೂರಿನ ಪ್ರಕರಣದ ಬಗ್ಗೆ ಕೇಂದ್ರ ಸಚಿವೆ ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡುತ್ತಿಲ್ಲ .ರಾಜ್ಯದ ಗೃಹ ಸಚಿವರು ಬಾಯಿಗೆ ಬಂದ ಹಾಗೆ ಹಗುರವಾಗಿ ಮಾತನಾಡುತ್ತಾರೆ. ಇನ್ನಾದರೂ ಮೈಸೂರಿನಲ್ಲಿ ನಡೆದ ಪ್ರಕರಣದ ಬಗ್ಗೆ ಗಂಭೀರವಾಗಿ ತನಿಖೆ ನಡೆಸಿ ಗೃಹಸಚಿವರು ತಮ್ಮ ಘನತೆಯನ್ನು ಕಾಪಾಡಿ ಕೊಳ್ಳಲಿ ಎಂದು ಹೇಳಿದರು.
ಹೆಬ್ರಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್, ಹೆಬ್ರಿ ಯುವ ಕಾಂಗ್ರೆಸ್ಅಧ್ಯಕ್ಷ ದಿನೇಶ್ ಶೆಟ್ಟಿ ಹೆಬ್ರಿ ಸೇರಿದಂತೆ ವಿವಿಧ ಗ್ರಾಪಂ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಎನ್ಎಸ್ಯುಐ ವಿದ್ಯಾರ್ಥಿ ಘಟಕದ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿಎಂ ಇವರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಅರ್ಪಿಸಲಾಯಿತು.