ಎಸ್ಸಿ-ಎಸ್ಟಿ ವರ್ಗದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಿ; ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು, ಆ. 30: `ರಾಜ್ಯದಲ್ಲಿನ ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ `ಎಸ್ಸಿ-ಎಸ್ಟಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989(ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995(ತಿದ್ದುಪಡಿ ನಿಯಮಗಳು 2016)' ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, `ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಿದರು.
`ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು. ರಾಜ್ಯ ಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಯಿತು. ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳಬೇಕು. ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ಸೂಚಿಸಿದರು.
`ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ಸೂಚಿಸಿದರು. ಜೊತೆಗೆ ಈ ಪ್ರಕರಣಗಳ ಸಂಪೂರ್ಣ ಮೇಲುಸ್ತುವಾರಿಗೆ ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು' ಎಂದು ತಿಳಿಸಿದರು.
`ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು' ಎಂದು ಬಸವರಾಜ ಬೊಮ್ಮಾಯಿ ಸೂಚಿಸಿದರು.
`ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಎಸ್ಸಿ-ಎಸ್ಟಿ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡಬೇಕು ಎಂದು ಸಿಎಂ ನಿರ್ದೇಶಿಸಿದರು.
`ಪರಿಶಿಷ್ಟ ಜಾತಿ, ಪಂಗಡದವರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಬೇಕು. ಈ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಅನುಷ್ಠಾನಗೊಳಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡುವಂತೆ ಸೂಚಿಸಲಾಗಿದೆ.
ಎಸ್ಸಿಪಿ/ಟಿಎಸ್ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೆ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಾರಿಗೆ ಮತ್ತು ಪರಿಶಿಷ್ಟ ಪಂಗಡದ(ಎಸ್ಸಿ) ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಸಮಿತಿಯ ಸದಸ್ಯರಾದ ಸಂಸದರು, ಶಾಸಕರು ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.