×
Ad

ಕೋವಿಡ್ ತಪಾಸಣೆ ಹೆಚ್ಚಿಸಿ, ಸೋಂಕು ನಿಯಂತ್ರಿಸಿ: ಸಚಿವ ಅಂಗಾರ

Update: 2021-08-30 22:48 IST

ಮಂಗಳೂರು, ಆ.30: ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೋವಿಡ್-19 ಸೋಂಕನ್ನು ನಿಯಂತ್ರಿಸಬಹುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಸಲಹೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿಂತೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುತ್ತಿದೆ. ಇದೀಗ ಪ್ರತಿದಿನ 15,000 ಕೊರೋನ ತಪಾಸಣೆಗಳನ್ನು ಮಾಡಲಾ ಗುತ್ತಿದೆ. ಈ ಪರೀಕ್ಷೆಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು ಎಂದರು. ಹೋಂ ಕ್ವಾರಂಟೈನ್‌ನಲ್ಲಿರುವ ಕೋವಿಡ್ ಸೋಂಕಿತರು ಹೊರಗೆ ಬಾರದಂತೆ ಆ ಭಾಗದ ವ್ಯಾಪ್ತಿಗೊಳಪಡುವ ಆರೋಗ್ಯ ಇಲಾಖೆಯ ಸಿಬ್ಬಂದಿ, ಜನಪ್ರತಿನಿಧಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸಬೇಕು ಎಂದರು.

ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಗುರುತಿಸಬೇಕು. ಸೋಂಕು ಹೊಂದಿದ್ದಲ್ಲಿ ಅವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು. ಆ ಮೂಲಕವೂ ಸೋಂಕನ್ನು ನಿಯಂತ್ರಿಸಬಹುದು ಎಂದರು.

ಕೋವಿಡ್ ಸೋಂಕಿತರು ಆಯುಷ್ಮಾನ್ ಕಾರ್ಡ್ ಹೊಂದಿರುವ ಬಗ್ಗೆ ಪರಿಶೀಲಿಸಬೇಕು. ಅವರಿಗೆ ಸರಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ಸೂಚ್ಯಂಕವು ಶೇ.2.27 ಇದ್ದು, ಹೆಚ್ಚಿನ ಕೋವಿಡ್ ಪರೀಕ್ಷೆಗಳನ್ನು ಮಾಡುವುದರಿಂದ ಹಾಗೂ ಜನಸಾಮಾನ್ಯರು ಕೊರೋನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಸೋಂಕನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ 29 ಕಂಟೈನ್‌ಮೆಂಟ್ ಜೋನ್ ಮತ್ತು 28 ಮೈಕ್ರೋ ಕಂಟೈನ್‌ಮೆಂಟ್ ಜೋನ್ ಇದ್ದೂ, ಆಗಸ್ಟ್ 23 ರಿಂದ 29 ರವರೆಗೆ ಒಟ್ಟು 77,888 ಸ್ವಾಬ್‌ಗಳ ಪರೀಕ್ಷೆ ನಡೆಸಲಾಗಿದೆ, ಜಿಲ್ಲೆಗೆ ಪ್ರತಿದಿನ ಬರುವ ಲಸಿಕೆಯನ್ನು ಆಯಾ ದಿನವೇ ಫಲಾನುಭವಿಗಳಿಗೆ ನೀಡಬೇಕು ಎಂದು ಸಂಬಂಧಿಸಿದವರಿಗೆ ನಿರ್ದೇಶನ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ವರಿಷ್ಠಾಧಿ ಕಾರಿ ಋಷಿಕೇಶ್ ಭಗವಾನ್ ಸೋನವಾಣೆ, ಡಿಸಿಪಿ ಹರಿರಾಂ ಶಂಕರ್, ಜಿಪಂ ಉಪಕಾರ್ಯದರ್ಶಿ ಆನಂದ ಕುಮಾರ್ ವೇದಿಕೆಯಲ್ಲಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News