ಇದೊಂದು ಐತಿಹಾಸಿಕ ಗೆಲುವು: ಬಿ.ಎಸ್.ಯಡಿಯೂರಪ್ಪ

Update: 2021-09-06 12:46 GMT

ಬೆಂಗಳೂರು, ಸೆ. 6: `ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದ್ದು, ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇದೊಂದು ಐತಿಹಾಸಿಕ ಗೆಲುವಾಗಿದೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಸೋಮವಾರ ಚುನಾವಣಾ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, `ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ' ಎಂದು ಹೇಳಿದ್ದಾರೆ.

`ಪ್ರಧಾನಿ ಮೋದಿಯವರ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತರ ಉತ್ತಮ ಫಲಿತಾಂಶ ಬಂದಿದೆ.  ಸಂಸದರು, ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಫಲಿತಾಂಶವು ತೃಪ್ತಿದಾಯಕವಾಗಿದೆ' ಎಂದು ತಿಳಿಸಿದ್ದಾರೆ.

`ಒಟ್ಟಾರೆಯಾಗಿ ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿಪರ ಆಡಳಿತ ನೀಡಲಿದೆ. ಈ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರಿಗೂ, ಮತದಾರರಿಗೆ ಹಾಗೂ ಮುಖಂಡರಿಗೆ ತುಂಬು ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News