ಅ. 7ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ: ಸಚಿವ ಎಸ್.ಟಿ.ಸೋಮಶೇಖರ್

Update: 2021-09-08 16:20 GMT

ಮೈಸೂರು,ಸೆ.8: ವಿಶ್ವವಿಖ್ಯಾತ ಮೈಸೂರು ದಸರಾಗೆ ಮೊದಲು ಸೆ. 13 ರಂದು ಗಜಪಯಣಕ್ಕೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಗುವುದು. 8 ಆನೆಗಳು ಈ ಬಾರಿ ದಸರೆಗೆ ಬರಲಿವೆ ಎಂದು ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಅರಮನೆ ಮಂಡಳಿ ಸಭಾಂಗಣದಲ್ಲಿ ಬುಧವಾರ ವಿಶ್ವ ವಿಖ್ಯಾತ ಮೈಸೂರು ದಸರಾ-2021ರ ದಸರಾ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸೆ. 16 ರಂದು ಮೈಸೂರು ಅರಮನೆಗೆ ಗಜಪಡೆ ಆಗಮಿಸಲಿದೆ. ಆನೆಗಳ ಪೋಷಣೆಗೆ 50 ಲಕ್ಷ ರೂ. ಮೀಸಲಿಡಲಾಗಿದೆ. ಅರಮನೆ ಆವರಣದಲ್ಲಿ  7 ದಿನವೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಅ. 7 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನಡೆಯಲಿದೆ. ಉದ್ಘಾಟಕರ ಆಯ್ಕೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಬಿಡಲಾಗಿದೆ. ಅರಮನೆ ಆವರಣದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 15 ರ ಸಂಜೆ 4.36 ರಿಂದ 4.44ರ ವೇಳೆಗೆ ನಂದಿ ಪೂಜೆ, ಬಳಿಕ ಸಂಜೆ 5 ರಿಂದ 5.36ರ ವರೆಗೆ ಜಂಬೂ ಸವಾರಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಬಾರಿ ನಗರದ ಒಳಗೆ 100 ಕಿ.ಮೀ.  ವಿದ್ಯುತ್ ದೀಪಾಲಂಕಾರ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. 3 ಸ್ಥಬ್ದಚಿತ್ರಗಳಿಗೆ ಈ ಬಾರಿ ಅವಕಾಶ ನೀಡಲಾಗಿದೆ. ಅರಮನೆ ಆವರಣದಲ್ಲಿ ದಸರಾ ವೀಕ್ಷಣೆಗೆ ಎಷ್ಟು ಜನರಿಗೆ ಅವಕಾಶ ನೀಡಬೇಕು ಎಂಬುದನ್ನು ಸೆ.25ರ ಬಳಿಕ ನಿರ್ಧರಿಸಲಾಗುವುದು ಎಂದರು.

ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ನೋಡಿಕೊಂಡು ಎಷ್ಟು ಜನರಿಗೆ ಅವಕಾಶ ನೀಡಬೇಕು ಎಂದು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಅಕ್ಟೋಬರ್ 17 ರಂದು ಗಜಪಡೆಗೆ  ಬೀಳ್ಕೊಡುಗೆ ಎಂದು ವಿವರಿಸಿದರು.

ಸಭೆಯಲ್ಲಿ ಸಂಸದ ಪ್ರತಾಪ್‍ಸಿಂಹ,  ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೆಗೌಡ, ಕೆ.ಟಿ.ಶ್ರೀಕಂಠೇಗೌಡ, ನಿರಂಜನ್ ಕುಮಾರ್,  ಎಲ್.ನಾಗೇಂದ್ರ, ಹರ್ಷವರ್ಧನ್, ಮೇಯರ್ ಸುನಂದಾ ಪಾಲನೇತ್ರ, ವಿವಿಧ ನಿಗಮ ಮಂಡಳಿ ಅಧ್ಯಕ್ಷರುಗಳಾದ ಹೆಚ್.ವಿ.ರಾಜೀವ್, ಫಣೀಶ್, ಅಪ್ಪಣ್ಣ, ಎ.ಹೇಮಂತ್ ಕುಮಾರ್ ಗೌಡ, ಮಹದೇವಸ್ವಾಮಿ, ಕೃಷ್ಣಪ್ಪಗೌಡ, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಎಸ್.ಪಿ. ಆರ್. ಚೇತನ್, ಜಿಲ್ಲಾ ಪಂಚಾಯತ್ ಸಿ.ಇ.ಒ. ಎ.ಎಂ.ಯೋಗೀಶ್, ಡಿಸಿಎಫ್ ಕರಿಕಾಳನ್, ಎಡಿಸಿ ಡಾ. ಬಿಎಸ್. ಮಂಜುನಾಥಸ್ವಾಮಿ, ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಬಾರಿ ಚಿನ್ನದ ಅಂಬಾರಿ ಬಾರ “ಅಭಿಮನ್ಯು”  ಹೆಗಲಿಗೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು “ಆಭಿಮನ್ಯು” ಆನೆ ಹೊರಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಗರದ ಅರಮನೆ ಮಂಡಳಿ ಆವರಣದಲ್ಲಿ ಬುಧವಾರ ದಸರಾ ಆನೆಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, 2021ನೇ ಸಾಲಿನ ಸರಳ ಸಾಂಪ್ರದಾಯಿಕ ದಸರಾ ಉತ್ಸವದಲ್ಲಿ ಅಂಬಾರಿ ಹೊರಲಿರುವ ಗಜಪಡೆಯ ನಾಯಕ, ಮತ್ತಿಗೋಡು ಶಿಬಿರದ ಅಭಿಮನ್ಯು(56), ಗೋಪಾಲಸ್ವಾಮಿ(38), ಆನೆಕಾಡು ಶಿಬಿರದ ವಿಕ್ರಮ(58), ದುಬಾರೆ ಶಿಬಿರದ ಕಾವೇರಿ(44), ಧನಂಜಯ(43), ನಾಗರಹೊಳೆಯ ದೊಡ್ಡಹರವೆ ಶಿಬಿರದ ಅಶ್ವತ್ಥಾಮ(34), ಬಂಡೀಪುರ ರಾಂಪುರ ಶಿಬಿರದ ಚೈತ್ರಾ (48) ಹಾಗೂ ಲಕ್ಷ್ಮೀ(20) ಆನೆಗಳು ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News