×
Ad

1ರಿಂದ 5ನೇ ತರಗತಿ ಪುನಾರಂಭದ ಬಗ್ಗೆ ಶೀಘ್ರದಲ್ಲೇ ನಿರ್ಧಾರ: ಸಚಿವ ಬಿ.ಸಿ.ನಾಗೇಶ್

Update: 2021-09-11 11:41 IST

ಶಿವಮೊಗ್ಗ, ಸೆ.11:  ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್​​ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರಗತಿಗಳು ಪುನರಾರಂಭ ಮಾಡುವ ಬಗ್ಗೆ ಸಮಿತಿಯ ಮುಂದೆ ವಿಷಯ ಮಂಡಿಸಲಾಗುತ್ತದೆ. ಈಗಾಗಲೇ 6ರಿಂದ 9ನೇ ತರಗತಿಗಳನ್ನು ನಮ್ಮ ಶಿಕ್ಷಕರು ಯಶಸ್ವಿಯಾಗಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

 ಅವಶ್ಯಕತೆ ಬಿದ್ದರೆ ಪಠ್ಯ ಕಡಿತ:

ಈಗಾಗಲೇ ತರಗತಿಗಳಲ್ಲಿ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್ ಮಾಡಲಾಗುತ್ತಿದೆ. ಪಠ್ಯಕ್ರಮ ಪೂರ್ಣ ಮಾಡುವುದರಿಂದ ಮಕ್ಕಳಿಗೆ ಲಾಭವಾಗುತ್ತದೆ. ಈಗಾಗಲೇ ಮಕ್ಕಳು ಸಾಕಷ್ಟು ತರಗತಿಗಳನ್ನು ಕಳೆದುಕೊಂಡಿದ್ದಾರೆ. ಬ್ರಿಡ್ಜ್ ಕೋರ್ಸ್ ಹಾಗೂ ಮತ್ತೆ ಪಾಠ ಮಾಡಿದ್ದರೆ ಮುಂದೆ ಸಮಸ್ಯೆ ಆಗುತ್ತದೆ. ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಇನ್ನೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.‌ ರಜೆ ಕಡಿಮೆ ಮಾಡಿ ಇನ್ನಷ್ಟು ತರಗತಿ ನಡೆಸಬಹುದೇ ಎಂಬ ಯೋಚನೆ ನಡೆಯುತ್ತಿದೆ. ಇದು ಯೋಚನೆ ಅಷ್ಟೇ, ಯಾವುದೇ ತೀರ್ಮಾನ, ಚರ್ಚೆ ನಡೆದಿಲ್ಲ. ಶಿಕ್ಷಕರ ಸಹಕಾರ ತೆಗೆದುಕೊಂಡು ಮಾಡುವ ಯೋಚನೆ ಇದೆ. ಅವಶ್ಯಕತೆ ಬಿದ್ದರೆ ಪಠ್ಯಕ್ರಮ ಕಡಿಮೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ತಡೆಯಾಜ್ಞೆ ತೆರವಿಗೆ ಚಿಂತನೆ:

ಶಿಕ್ಷಕರ ವರ್ಗಾವಣೆಗೆ ಕೋರ್ಟ್​ನಿಂದ​​ ತಡೆಯಾಜ್ಞೆ ಇದೆ. ಇದನ್ನು ಶಿಕ್ಷಕರು ಯಾಕೆ‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ, ಅನೇಕರಿಗೆ ಸಮಸ್ಯೆಯಾಗಿದೆ. ಅವಶ್ಯವಿದ್ದರೆ ಕೋರ್ಟ್ ಮೂಲಕವೇ ತಡೆಯಾಜ್ಞೆ ತೆರವು ಮಾಡಲಾಗುವುದು ಎಂದರು.

ನೆರೆಯ ರಾಜ್ಯವಾದ  ಕೇರಳದಲ್ಲಿ ಕೋವಿಡ್​ ಸೋಂಕು ಹೆಚ್ಚುತ್ತಿದೆ. ಆದರೆ, ನಮ್ಮ ದಕ್ಷಿಣ ಕನ್ನಡ, ಉಡುಪಿಯಲ್ಲಿ ಕಡಿಮೆ ಆಗುತ್ತಿದೆ. ಕೊರೋನ ಹೆಚ್ಚಾದರೆ, ಈಗಾಗಲೇ ತೆರೆದಿರುವ ಶಾಲೆಗಳನ್ನು ಮುಚ್ಚುವ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News