×
Ad

ದೇಶ ಅಭಿವೃದ್ಧಿಯು ನೈಸರ್ಗಿಕ ಸಂಪನ್ಮೂಲಗಳ ಮೇಲೆ ಅವಲಂಬಿತವಾಗಿದೆ: ನ್ಯಾ.ಉಮೇಶ್ ಅಡಿಗ

Update: 2021-09-11 21:52 IST

ಧಾರವಾಡ, ಸೆ.11: ಒಂದು ದೇಶ ಶ್ರೀಮಂತಿಕೆ ಆ ದೇಶದ ನೈಸರ್ಗಿಕ ಸಂಪತ್ತನ್ನು ಅವಲಂಬಿಸಿರುತ್ತದೆ. ನೈಸರ್ಗಿಕ ಸಂಪತ್ತಿನ ಸಂರಕ್ಷಣೆಗಾಗಿ ಹಲವಾರು ಅರಣ್ಯ ಸಿಬ್ಬಂದಿ ತಮ್ಮ ಪ್ರಾಣತ್ಯಾಗ ಮಾಡಿದ್ದು, ಅವರ ಸ್ಮರಣೆಯು ನಮ್ಮ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ್ ಅಡಿಗ ಹೇಳಿದರು.

ಶನಿವಾರ ನಗರದ ಕೆ.ಸಿ.ಪಾರ್ಕ್ ಹತ್ತಿರದ ಅರಣ್ಯ ಸಂಕೀರ್ಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು  ಮಾತನಾಡಿದರು.

ದೇಶ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಆ ದೇಶದ ಶ್ರೀಮಂತಿಕೆ, ಅಭಿವೃದ್ಧಿ ಅವಲಂಬಿತವಾಗಿರುತ್ತದೆ. ಅರಣ್ಯ ರಕ್ಷಕ ಸಿಬ್ಬಂದಿಗೆ ಹೆಚ್ಚಿನ ಸವಲತ್ತುಗಳನ್ನು ನೀಡುವ ಮೂಲಕ ಅವರಿಗೆ ಧೈರ್ಯ ತುಂಬಬೇಕು. ಆ ಮೂಲಕ ನಮ್ಮ ದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಣೆ ಮಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಮಹಾಮಾರಿಯಿಂದ ಉಂಟಾದ ಆಮ್ಲಜನಕ ಕೋರತೆಯು ಪ್ರಾಣವಾಯು ನೀಡುವ ಪರಿಸರದ ಮಹತ್ವವನ್ನು ನಮಗೆ ತೋರಿಸಿ ಕೊಟ್ಟಿದೆ. ಆದುದರಿಂದ, ಪರಿಸರ ರಕ್ಷಣೆ ಮತ್ತು ವನ್ಯಜೀವಿಗಳ ರಕ್ಷಣೆಯು ಬರಿ ಅರಣ್ಯ ಇಲಾಖೆಯಿಂದ ಮಾತ್ರವಲ್ಲದೆ. ಇಡೀ ದೇಶದ ಜನರು ತಮ್ಮ ಕರ್ತವ್ಯವೆಂದು ಅರಿತು ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು.

ನಮ್ಮ ಬದುಕಿಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರಿಗಾಗಿ, ನಮ್ಮ ಕೊನೆ ಉಸಿರು ಇರುವ ತನಕ ಅವರ ತ್ಯಾಗ, ಬಲಿದಾನವನ್ನು ಸ್ಮರಿಸಿಕೊಳ್ಳಬೇಕು ಎಂದು ಉಮೇಶ್ ಅಡಿಗ ತಿಳಿಸಿದರು.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಚೌವ್ಹಾಣ್ ಮಾತನಾಡಿ, ಪ್ರತಿ ವರ್ಷ ಸೆ.11ರಂದು ಇಡೀ ದೇಶದಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ದೇಶ ಪ್ರತಿಯೊಬ್ಬರು ಕೈ ಜೋಡಿಸಿ ನಮ್ಮ ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕಾರ್ಯವಾಗಬೇಕು. ದೇಶದ ಅಭಿವೃದ್ಧಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಸಮತೋಲನದಲ್ಲಿ ಇರಬೇಕು. ಅಭಿವೃದ್ಧಿಯನ್ನು ಪರಿಸರ ರಕ್ಷಣೆಯ ಜೊತೆಗೆ ಕಾರ್ಯಕೈಗೊಳ್ಳಬೇಕು ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 55 ವರ್ಷಗಳಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತ 53 ಹುತಾತ್ಮರರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಉಪ ಪೊಲೀಸ್ ಆಯುಕ್ತ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ಗೋಪಾಲಕೃಷ್ಣ, ಪ್ರೊಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಕೆ.ಟಿ.ಹನುಮಂತಪ್ಪ, ಅರಣ್ಯ ವ್ಯವಸ್ಥಾಪನಾ ಅಧಿಕಾರಿ ಎ.ಎ.ಇಳಕಲ್, ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿವೇಕ ಕವರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಕೆಂಚಪ್ಪನವರ, ಹನುಮಂತರಾಜು ಗುತ್ತೆಪ್ಪ, ನಿವೃತ್ತ ಉಪ ಅರಣ್ಯ ಸಂರಕ್ಷಾಧಿಕಾರಿ ಡಿ.ಆರ್.ನಾಯಕ, ಎಸ್.ಎನ್.ಕುಲಕರ್ಣಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News