ಹೆಜಮಾಡಿ: ಗ್ರಾಮದ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಗೌರವಾರ್ಪಣೆ
ಪಡುಬಿದ್ರಿ: ಕೆಲಸದಲ್ಲಿ ಆತ್ಮ ಸಂತೃಪ್ತಿ ದೊರೆತರೆ ಶಿಕ್ಷಕ ವೃತ್ತಿಗೆ ಗೌರವ ನೀಡಿದಂತೆ ಎಂದು ಶಿಕ್ಷಣ ತಜ್ಞ ಹಾಗೂ ಅಲ್ ಅಝ್ಹರ್ ಶಾಲೆಯ ಸಂಚಾಲಕ ಶೇಕಬ್ಬ ಕೋಟೆ ಅಭಿಪ್ರಾಯಪಟ್ಟರು.
ಹೆಜಮಾಡಿ ನಾಗರಿಕ ಕ್ರಿಯಾ ಸಮಿತಿಯ ವತಿಯಿಂದ ಸೋಮವಾರ ಹೆಜಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.
ಸಮಿತಿಯ ವತಿಯಿಂದ ಹೆಜಮಾಡಿ ಗ್ರಾಮದ ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ ಕೋಡಿ ಸರಕಾರಿ ಪ್ರೌಢ ಶಾಲೆ, ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ ಸರಕಾರಿ ಪ್ರೌಢ ಶಾಲೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ಹೆಜಮಾಡಿ ಅಲ್ ಅಝರ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಹೆಜಮಾಡಿ ಕೋಡಿ ವಿದ್ಯಾಪ್ರಸಾರ ಅಂಗ್ಲ ಮಾಧ್ಯಮ ಶಾಲೆಗಳ ಎಲ್ಲಾ 65 ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕ್ರಿಯಾ ಸಮಿತಿಯ ಅಧ್ಯಕ್ಷ ಸುಧಾಕರ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವ ಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಾಣೇಶ್ ಹೆಜ್ಮಾಡಿ, ವಿದ್ಯಾಪ್ರಸಾರ ಶಾಲಾ ಸಂಚಾಲಕ ಜಯಶೀಲ ಬಂಗೇರ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಕ್ರಿಯಾ ಸಮಿತಿಯ ಉಪಾಧ್ಯಕ್ಷ ರೋಲ್ಫಿ ಡಿಕೋಸ್ತ ಪ್ರಸ್ತಾವಿಸಿ ಸಮಿತಿಯ ಕಾರ್ಯಚಟುವಟಿಕೆಗಳ ಸಮಗ್ರ ಮಾಹಿತಿ ನೀಡಿದರು.
ನಿವೃತ್ತ ಶಿಕ್ಷಕ ಸಂಜೀವ ಟಿ. ಸ್ವಾಗತಿಸಿದರು. ಗೋವರ್ಧನ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಮುಖ್ಯ ಶಿಕ್ಷಕಿ ಲತಾ ಪ್ರಾರ್ಥಿಸಿ, ಕಾರ್ಯದರ್ಶಿ ಸನಾ ಇಬ್ರಾಹಿಮ್ ವಂದಿಸಿದರು. ಕಾರ್ಯಕ್ರಮಕ್ಕೆ ಮುನ್ನ ಕ್ರಿಯಾ ಸಮಿತಿಯ ವತಿಯಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.