ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

Update: 2021-09-14 15:57 GMT

ಬೆಂಗಳೂರು, ಸೆ.14: 2021ನೇ ಸಾಲಿನ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪೌರಾಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಿದರು.

ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಸಭೆಯಲ್ಲಿ ಪರಿಣಾಮಕಾರಿಯಾಗಿ ಹಾಗೂ ವಿಷಯಾಧಾರಿತ ಚರ್ಚೆಯನ್ನು ನಡೆಸುವುದಕ್ಕಾಗಿ, ನಿರ್ದೇಶಕರ ಮಂಡಳಿಯಲ್ಲಿ ಸರಕಾರೇತರ ಸದಸ್ಯರ ಸಂಖ್ಯೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಒಬ್ಬ ವ್ಯಕ್ತಿಯ ಬದಲಾಗಿ, ಪ್ರತಿಯೊಂದು ಕಂದಾಯ ವಲಯದಿಂದ ಮೂವರು ವ್ಯಕ್ತಿಗಳಂತೆ, ಆದರೆ ಒಂದೇ ಜಿಲ್ಲೆಯಿಂದ ಒಂದಕ್ಕಿಂತ ಹೆಚ್ಚಿರದಂತೆ ಹನ್ನೆರಡು ಸರಕಾರೇತರ ಸದಸ್ಯರಿಗೆ ಕಡಿತಗೊಳಿಸಲು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯಮಗಳ ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ ಸಂಖ್ಯೆ 7) ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದ ವಿಧೇಯಕವಾಗಿದೆ.

2021ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್(ತಿದ್ದುಪಡಿ) ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನ ಸಭೆಯಲ್ಲಿ ಮಂಡಿಸಿದರು.
2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಿದರು.

2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪೌರಾಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು ಪರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದರು.
ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ(ತಿದ್ದುಪಡಿ) ವಿಧೇಯಕ, ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, ಬಂದಿಗಳ ಗುರುತಿಸುವಿಕೆ(ಕರ್ನಾಟಕ ತಿದ್ದುಪಡಿ) ವಿಧೇಯಕ, ದಂಡ ಪ್ರಕ್ರಿಯಾ ಸಂಹಿತೆ(ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ಸ್ಟಾಂಪು(ತಿದ್ದುಪಡಿ) ವಿಧೇಯಕ, ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News