ಬೆಂಗರೆ ಶಾಲೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಎಸ್‌ಐಒ ಮನವಿ

Update: 2021-09-17 13:08 GMT

ಮಂಗಳೂರು, ಸೆ.17: ವಿದ್ಯಾರ್ಥಿಗಳಿಗೆ ಖಾಸಗಿ ಬಸ್‌ ಗಳಲ್ಲಿ ರಿಯಾಯಿತಿ ಪ್ರಯಾಣ ದರವನ್ನು ನೀಡಬೇಕು ಮತ್ತು ಬೆಂಗರೆ ಪ್ರದೇಶ ಸರಕಾರಿ ಪ್ರಾಥಮಿಕ ಶಾಲೆಗೆ ಸೂಕ್ತವಾದ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಎಸ್‌ಐಒ ದ.ಕ. ಸಮಿತಿಯ ವತಿಯಿಂದ ಶುಕ್ರವಾರ ದ.ಕ.ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕೋವಿಡ್-19 ಸೋಂಕಿನಿಂದಾಗಿ ಸ್ಥಗಿತಗೊಂಡಿದ್ದ ಶಾಲಾ ಕಾಲೇಜಿನ ತರಗತಿಗಳು ಪುನಃ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಎಲ್ಲಾ ರೀತಿಯ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ದ.ಕ. ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಲು ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನೇ ಬಳಸಿಕೊಳ್ಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡೀಸೇಲ್ ಬೆಲೆ ಏರಿಕೆಯಾದ್ದರಿಂದ ಎಲ್ಲಾ ಖಾಸಗಿ ಬಸ್ ಪ್ರಯಾಣ ದರ ಕೂಡ ವಿಪರೀತವಾಗಿ ಏರಿಕೆಯಾಗಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಪ್ರಯಾಣಿಸುವುದು ಕಷ್ಟಕರವಾಗಿದೆ. ಅದಕ್ಕಾಗಿ ಖಾಸಗಿ ಬಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರವನ್ನು ನೀಡಬೇಕೆಂದು ಮನವಿ ಸಲ್ಲಿಸಲಾಯಿತು.

ಬೆಂಗ್ರೆ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಪ್ರಾಥಮಿಕ ಶಾಲೆಯು ಸೂಕ್ತ ಸೌಲಭ್ಯಗಳ ಕೊರತೆಯಿಂದ ಶಿಥಿಲಗೊಳ್ಳುವ ಪರಿಸ್ಥಿತಿ ಎದುರಾಗಿದೆ. ಶಾಲೆಯು 18 ಕೊಠಡಿಗಳನ್ನು ಹೊಂದಿದ್ದು, ಅದರಲ್ಲಿ ಎಲ್ಲಾ ಮೇಲ್ಛಾವಣಿಗಳು ಸೋರುತ್ತಿದೆ. ಶಾಲೆಯಲ್ಲಿ ಬೆಂಚ್ ಹಾಗೂ ಮೇಜುಗಳ ಕೊರತೆಯೂ ಎದ್ದು ಕಾಣುತ್ತಿದೆ. ಶೌಚಾಲಯಗಳು ಕೂಡ ಬಳಸಲಾಗದಂತಹ ಸ್ಥಿತಿಯಲ್ಲಿದೆ. ತರಗತಿಗಳು ಕೆಲವೇ ದಿನಗಳಲ್ಲಿ ಪ್ರಾರಂಭವಾಗುವುದರಿಂದ ಮೂಲ ಸೌಕರ್ಯಗಳ ಹಾಗೂ ಶೈಕ್ಷಣಿಕ ಸೌಲಭ್ಯಗಳ ಕೊರತೆಯು ಹಿಂದುಳಿದ ವಿದ್ಯಾರ್ಥಿಗಳಲ್ಲಿ ಅತೀವ ಸಂಕಷ್ಟವನ್ನುಂಟು ಮಾಡಬಹುದು. ಆದ್ದರಿಂದ ಸರಕಾರಿ ಪ್ರಾಥಮಿಕ ಶಾಲೆಗೆ ಸೂಕ್ತವಾದ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕೆಂದು ಒತ್ತಾಯಿಸಲಾಯಿತು.

ಈ ಸಂದರ್ಭ ಎಸ್‌ಐಒ ದ.ಕ.ಜಿಲ್ಲಾಧ್ಯಕ್ಷ ರಿಝ್ವನ್ ಅಹ್ಮದ್, ಜಿಲ್ಲಾ ಕಾರ್ಯದರ್ಶಿ ಇರ್ಷಾದ್ ವೇಣೂರು, ಸದಸ್ಯರಾದ ರಾಝಿಕ್ ಬೆಂಗ್ರೆ, ಅಝೀಝ್ ಬೆಂಗ್ರೆ, ಅಯಾನ್ ಕುದ್ರೋಳಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News