ಭಾರತವನ್ನು ವಿಶ್ವದ ಸಿರಿಧಾನ್ಯ ರಫ್ತಿನ ಹಬ್ ಮಾಡುವ ಗುರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Update: 2021-09-17 14:10 GMT

ಉಡುಪಿ, ಸೆ.17: ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡಲಾಗುವುದು. ಈ ಮೂಲಕ ಭಾರತ ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ವಲಯ ಕೃಷಿ ಮತ್ತು ತೋಟ ಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾದ ಅಂತಾ ರಾಷ್ಟ್ರೀಯ ಸಿರಿಧಾನ್ಯ ವರ್ಷ -2023, ಪೌಷ್ಠಿಕತೋಟ ಮತ್ತು ವೃಕ್ಷಾರೋಪಣ ಪ್ರಚಾರಾಂದೋಲನ ಕಾರ್ಯಕ್ರಮವನ್ನು ಮಹಿಳೆಯರ ಮಡಿಲಿಗೆ ಸಿರಿಧಾನ್ಯ ಗಳನ್ನು ತುಂಬಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಭಾರತ ಮಳೆಯಾಧಾರಿತ ಕೃಷಿಯನ್ನು ಅವಲಂಭಿಸಿರುವ ರಾಷ್ಟವಾಗಿದ್ದು, ಇಲ್ಲಿನ ವಾತಾವರಣವು ಸಿರಿಧಾನ್ಯ ಕೃಷಿಗೆ ಸೂಕ್ತವಾಗಿದೆ. ಸಿರಿಧಾನ್ಯಗಳಲ್ಲಿ ರಾಸಾಯನಿಕ ಅಂಶಗಳು ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟಿನ್ ಅಂಶಗಳು ಹೆಚ್ಚಿವೆ. ಮಧುಮೇಹ ನಿಯಂತ್ರಣ ಸೇರಿದಂತೆ ಹಲವು ಸಮಸ್ಯೆಗಳಿಗೆ ವೈದ್ಯರು ಶಿಫಾರಸ್ಸು ಮಾಡುತ್ತಿದ್ದಾರೆ. ಅಲ್ಲದೇ ದೇಹದಲ್ಲಿ ರೋಗ ನಿರೋಧಕ ಶಕ್ತಿ ಬೆಳವಣಿಗೆಗೆ ಪೂರಕವಾಗಿದೆ ಎಂದರು.

ಕರ್ನಾಟಕದಲ್ಲಿ ಹಿಂದೆ 8 ಲಕ್ಷ ಹೆಕ್ಟರ್‌ನಲ್ಲಿ ಸಿರಿಧಾನ್ಯಗಳನ್ನು ಬೆಳೆಯುತ್ತಿದ್ದು, ಈಗ ಆ ಪ್ರಮಾಣ 3 ಲಕ್ಷ ಹೆಕ್ಟರ್‌ಗೆ ಇಳಿದಿದೆ. ದೇಶದಾದ್ಯಂತ ಮುಂದಿನ ಎರಡು ವರ್ಷಗಳಲ್ಲಿ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ಸಿರಿಧಾನ್ಯಗಳ ಉತ್ಪಾದನೆ ಹೆಚ್ಚಿಸಲಾಗುವುದು. ರಾಯಭಾರಿ ಕಚೇರಿಗಳ ಮೂಲಕವೂ ಸಿರಿಧಾನ್ಯಗಳ ಬಳಕೆಯ ಮಹತ್ವ ಕುರಿತು ತಿಳಿಸುವ ಪ್ರಯತ್ನ ನಡೆಯಲಿದೆ ಎಂದರು.

ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತು ರಾಜ್ಯ ಸರಕಾರದೊಂದಿಗೆ ಚರ್ಚಿಸಿ, ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗು ವುದು ಎಂದು ಸಚಿವೆ ಶೋಾ ಕರಂದ್ಲಾಜೆ ಭರವಸೆ ನೀಡಿದರು.

ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯ ಕುಲಪತಿ ಡಾ.ಮಂಜುನಾಥ ಕೆ.ನಾಯಕ್ ಮಾತನಾಡಿ, ದೇಶಾದ್ಯಂತ 800 ಕೇಂದ್ರಗಳಲ್ಲಿ ಈ ಕಾರ್ಯಕ್ರಮ ಇಂದು ಆರಂಭಿಸಲಾಗಿದ್ದು, ಆರೋಗ್ಯದ ದೃಷ್ಠಿಯಿಂದ ಸಿರಿಧಾನ್ಯಗಳ ಸೇವನೆ ಅತ್ಯಂತ ಪ್ರಯೋಜನವಾಗಿದ್ದು, ಎಲ್ಲಾ ರೀತಿಯ ಪೌಷ್ಠಿಕಾಂಶಗಳು ಇದರಲ್ಲಿ ಇವೆ ಎಂದರು.

ಇದೇ ಸಂದರ್ಭದಲ್ಲಿ ಸಿರಿಧಾನ್ಯಗಳಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಕುರಿತ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಸಚಿವರು, ಪೌಷ್ಠಿಕತೋಟ ಮತ್ತು ವೃಕ್ಷಾರೋಪಣ ಪ್ರಚಾರಾಂದೋಲನ ಅಂಗವಾಗಿ ಗಿಡಗಳನ್ನು ವಿತರಿಸಿದರು.

ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಚಾಂತಾರು ಹೇರೂರು ಗ್ರಾಪಂ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ರಾಜ್ಯ ಮಟ್ಟದ ಸಾವಯುವ ಕೃಷಿ ಉನ್ನತ ಮಟ್ಟದ ಸಮಿತಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಡಾ.ನವೀನ್ ಭಟ್, ವಿವಿಯ ವಿಸ್ತರಣಾ ನಿರ್ದೇಶಕ ಡಾ.ಕೆ.ಸಿ.ಶಶಿಧರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಉಪಸ್ಥಿತರಿದ್ದರು.

ವಲಯ ಕೃಷಿ ಮತ್ತು ತೋಟಗಾರಿಕೆ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ ಸ್ವಾಗತಿಸಿದರು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ.ಬಿ.ಧನಂಜಯ ವಂದಿಸಿದರು. ಡಾ.ನವೀನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News