ಸಾಮಾಜಿಕ ಜಾಲತಾಣ ಬಳಕೆಗೆ ಅಧಿಕಾರಿ, ಸಿಬ್ಬಂದಿಗೆ ನಿರ್ಬಂಧ : ರಾಜ್ಯ ಸರ್ಕಾರ

Update: 2021-09-19 12:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಾಮಾಜಿಕ ಮಾಧ್ಯಮಗಳನ್ನು ವೇದಿಕೆಗಳನ್ನಾಗಿ ಬಳಸಿಕೊಂಡು ಸರ್ಕಾರದ ಸಾಧನೆಗಳನ್ನು ಅಧಿಕಾರಿಗಳ ಅಥವಾ ನೌಕರರ ವೈಯಕ್ತಿಕ ಸಾಧನೆ ಎಂದು ಪ್ರದರ್ಶಿಸಿಕೊಳ್ಳುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ ಎಂದು ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಅವರು ತಿಳಿಸಿದ್ದಾರೆ. 

ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಅವರು, ನಿಯಮ ಉಲ್ಲಂಘಿಸಿದರೆ ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳು 2021ರ ಅನ್ವಯ ಕ್ರಮ ಜರುಗಿಸಬೇಕಾಗುತ್ತದೆ ಎಂದು ಪ್ರಕಟನೆಯಲ್ಲಿ ವಿವರಿಸಿದ್ದಾರೆ.

ಇಲಾಖೆ/ ಕಚೇರಿಯ ಹೆಸರಿನಲ್ಲಿ ತೆರೆದ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ಅಧಿಕಾರಿಗಳು ಸರ್ಕಾರದ ಅಧಿಕೃತ ಮಾಹಿತಿಯನ್ನು ಪ್ರಸಾರ ಮಾಡುವುದೂ ಸೇರಿದಂತೆ ಅಧಿಕೃತ ಕರ್ತವ್ಯ ನಿರ್ವಹಿಸಲು ಮಾತ್ರ ಬಳಸಬಹುದು. ವೈಯಕ್ತಿಕ ಖಾತೆಯನ್ನು ಈ ಉದ್ದೇಶಕ್ಕೆ ಬಳಸುವಂತಿಲ್ಲ ಎಂದು ಮುಖ್ಯಕಾರ್ಯದರ್ಶಿ ಹೇಳಿದ್ದಾರೆ.

ಕುಂದು ಕೊರತೆ ವ್ಯಕ್ತಪಡಿಸಲು, ತಮ್ಮ ಅನಿಸಿಕೆಗಳನ್ನು ಹೇಳಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಅಥವಾ ಮುಜುಗರ ಉಂಟು ಮಾಡುವ ಕೃತ್ಯದಲ್ಲಿ ತೊಡಗಿದರೆ ಶಿಸ್ತುಕ್ರಮ ಅನಿವಾರ್ಯ. ಪ್ರತಿಕೂಲ ಟೀಕೆ ಅಥವಾ ಮಾನಹಾನಿಯ ಸಂದರ್ಭದಲ್ಲಿ ನಿರ್ದಿಷ್ಟ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ತಮ್ಮ ಸಮರ್ಥನೆಗಾಗಿ ಪತ್ರಿಕೆ, ಮಾಧ್ಯಮ ಅಥವಾ ನ್ಯಾಯಾಲಯದ ಮೊರೆ ಹೋಗುವಂತಿಲ್ಲ’ ಎಂದೂ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

`ಸಾಮಾಜಿಕ ಮಾಧ್ಯಮಗಳನ್ನು ವೇದಿಕೆಯನ್ನಾಗಿರಿಸಿಕೊಂಡು ಇಲಾಖೆ/ಸರಕಾರದ ಸಾಧನೆಗಳನ್ನು ಅಧಿಕಾರಿಗಳ ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇಲಾಖೆ ಸಾಧನೆಗಳ ಬಗ್ಗೆ ಅಥವಾ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ ಅಧಿಕಾರಿಗಳು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಳಸದೇ ಸರಕಾರದ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು'

-ಪಿ.ರವಿಕುಮಾರ್ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News