ಬೆಂಗಳೂರು; ಬೈಕ್ ಸವಾರರಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

Update: 2021-09-19 14:11 GMT

ಬೆಂಗಳೂರು, ಸೆ.19: ಅನ್ಯಕೋಮಿನ ಯುವತಿಗೆ ಬೈಕ್‍ನಲ್ಲಿ ಡ್ರಾಪ್ ಕೊಡುವಾಗ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದ ಆರೋಪ ಸಂಬಂಧ ಇಬ್ಬರನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ಡಿಸಿಪಿ ಶ್ರೀನಾಥ್ ಮಹದೇವ್ ಜೋಶಿ ಹೇಳಿದ್ದಾರೆ.

ತಡರಾತ್ರಿ ಇಲ್ಲಿನ ಹೊಸೂರು ರಸ್ತೆ ಡೈರಿ ಸರ್ಕಲ್ ಬಳಿ ಯುವತಿಗೆ ಅನ್ಯಕೋಮಿನ ವ್ಯಕ್ತಿಯೋರ್ವ ಬೈಕ್‍ನಲ್ಲಿ ಡ್ರಾಪ್ ನೀಡುತ್ತಿದ್ದ. ಈ ವೇಳೆ ಕೆಲ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಿಕೊಂಡು ಬಂದು ಬೈಕ್ ನಿಲ್ಲಿಸಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಅಷ್ಟೇ ಅಲ್ಲದೆ, ಯುವತಿಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿರುವೆ ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದಲ್ಲದೆ ವಿಡಿಯೋ ಮಾಡಿದ್ದರು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದ್ದು, ಕೆಲ ಸಂಘಟನೆಗಳು ಘಟನೆಯನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು. ಈ ಘಟನೆ ನಡೆದು 12 ಗಂಟೆಯೊಳಗಾಗಿ ಮೈಕೋ ಲೇಔಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕರಿಬಸವನಗೌಡ ಮಾರ್ಗದರ್ಶನದಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ನಮ್ಮ ಸರಕಾರ ಇಂತಹ ಘಟನೆಗಳ ವಿರುದ್ಧ ಕಠಿಣ ನಿಲುವು ತಾಳುತ್ತದೆ. ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ.

-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News