ಮುಖ್ಯಮಂತ್ರಿ ಬೊಮ್ಮಾಯಿ ರೈತರ ಕ್ಷಮೆ ಕೋರಬೇಕು: ಡಿ.ಕೆ.ಶಿವಕುಮಾರ್

Update: 2021-09-20 14:56 GMT

ಬೆಂಗಳೂರು, ಸೆ.20: ದಿಲ್ಲಿಯಲ್ಲಿ ತಮ್ಮ ಹಕ್ಕಿಗಾಗಿ ರೈತರು ನಡೆಸುತ್ತಿರುವ ಹೋರಾಟವನ್ನು ‘ಪ್ರಾಯೋಜಿತ ಹೋರಾಟ' ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೇಳಿಕೆ ಆಘಾತಕಾರಿ. ಅವರು ಕೂಡಲೇ ರೈತರ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

ಸೋಮವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹಕ್ಕಿನ ರಕ್ಷಣೆಗಾಗಿ ಕಳೆದ ಒಂದು ವರ್ಷದಿಂದ ರೈತರು ದಿಲ್ಲಿಯಲ್ಲಿ ಹೋರಾಟ ಮಾಡುತ್ತಿದ್ದು, ಈ ಹೋರಾಟವನ್ನು ಪ್ರಾಯೋಜಿತ ಹೋರಾಟ ಎಂದು ಮುಖ್ಯಮಂತ್ರಿ ಹೇಳಿರುವುದು ಸರಿಯಲ್ಲ ಎಂದರು.

ರೈತರು ಉತ್ತಮ ಉದ್ದೇಶದಿಂದ ಹೋರಾಟ ಮಾಡುತ್ತಿದ್ದು, ಈ ಹೋರಾಟ ಕೇವಲ ಅಲ್ಲಿರುವ ರೈತರ ಹೋರಾಟವಲ್ಲ. ಇದು ಇಡೀ ದೇಶದ ರೈತರಿಗೆ ಸಂಬಂಧಿಸಿದ ಹೋರಾಟ. ಅವರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಈ ಹೋರಾಟಕ್ಕೆ ವಿಶ್ವದ ಅನೇಕ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಇಂತಹ ಹೇಳಿಕೆ ನೀಡಿದ್ದಾರೆ. ರೈತರ ಹೋರಾಟ ಪ್ರಾಯೋಜಿತ ಆಗಿರುವುದು ನಿಜವೇ ಆಗಿದ್ದರೆ ಯಾರು ಈ ಹೋರಾಟ ಪ್ರಾಯೋಜಿಸುತ್ತಿದ್ದಾರೆ? ಕಾಂಗ್ರೆಸ್, ಬಿಜೆಪಿ ಅಥವಾ ಮತ್ತ್ಯಾರೂ ಕೂಡ ಪ್ರಾಯೋಜಕತ್ವ ನೀಡಿಲ್ಲ. ಪ್ರಜಾಪ್ರಭುತ್ವ ದೇಶದಲ್ಲಿ ಅವರು ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸರಕಾರ ಇದುವರೆಗೂ ಅವರ ಅಳಲು ಕೇಳಿಲ್ಲ, ಯಾಕೆ? ಎಂದು ಶಿವಕುಮಾರ್ ಪ್ರಶ್ನಿಸಿದರು. 

ಬಿಜೆಪಿ ಅವರ ಹೇಳಿಕೆಯಂತೆ ಈ ಹೋರಾಟ ಕಾಂಗ್ರೆಸ್ ಪ್ರಾಯೋಜಿತವಲ್ಲ. ರೈತರು ಸದುದ್ದೇಶದಿಂದ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ. ದೇಶಾದ್ಯಂತ ರೈತರ ಬೆನ್ನಿಗೆ ನಿಂತಿದ್ದೇವೆ ಎಂದು ಶಿವಕುಮಾರ್ ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News