ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ: ಸೆ.26 ರಿಂದ ಪಾದಯಾತ್ರೆ

Update: 2021-09-20 17:02 GMT

ಶಿವಮೊಗ್ಗ, ಸೆ.20): ತೀರ್ಥಹಳ್ಳಿ ತಾಲೂಕಿನಲ್ಲಿ ವಾಸವಿರುವ ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿಗೆ ಹಕ್ಕುಪತ್ರ ನೀಡುವಂತೆ ಹಾಗೂ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಸೆ.26 ರಿಂದ 28 ರವರೆಗೆ ಕರಕುಚ್ಚಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶರಾವತಿ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಪ್ರಮುಖ ಲೋಕೇಶ್ ಕರಕುಚ್ಚಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.26 ರಂದು ಬೆಳಗ್ಗೆ 10 ಗಂಟೆಗೆ ಕರಕುಚ್ಚಿಯಿಂದ ಪಾದಯಾತ್ರೆ ಆರಂಭಿಸಲಾಗುತ್ತದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇದಕ್ಕೆ ಚಾಲನೆ ನೀಡಲಿದ್ದಾರೆ. ಸೆ.28 ರಂದು ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಿ ಸರ್ಕಾರದ ಗಮನ ಸೆಳೆಯಲಾಗುತ್ತದೆ ಎಂದು ತಿಳಿಸಿದರು.

ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಅನೇಕ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಲಿಂಗನಮಕ್ಕಿ ಜಲಾಶಯದಿಂದ ಮುಳುಗಡೆಯಾದವರನ್ನು ಕಳೆದ 60 ವರ್ಷಗಳ ಹಿಂದೆ ವಿವಿಧ ಸರ್ವೇ ನಂಬರ್ಗಳನ್ನು ತಂದು ಬಿಡಲಾಗಿತ್ತು. ಅಂದಿನಿಂದಲೂ ಕೃಷಿ ಮಾಡಿಕೊಂಡು ಜೀವನ ಸಾಗಿರುತ್ತಿರುವ ಸಂತ್ರಸ್ತರಿಗೆ ಇದುವರೆಗೂ ಭೂಮಿ ಹಕ್ಕು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಸಮಿತಿಯ ಇನ್ನೋರ್ವ ಮುಖಂಡ ಕೆರೆಹಳ್ಳಿ ರಾಮಪ್ಪ ಮಾತನಾಡಿ, ತೀರ್ಥಹಳ್ಳಿ ತಾಲೂಕಿನ ಕೆರೆಹಳ್ಳಿ, ಸಂಕ್ಲಾಪುರ, ಕೊಂಬಿನಕೈ ಗ್ರಾಮಗಳ ವಿವಿಧ ಸರ್ವೇ ನಂಬರ್ಗಳಲ್ಲಿ ಸಂತ್ರಸ್ತರಿಗೆ 60 ರ ದಶಕದಲ್ಲಿ ನೀಡಿದ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದಾರೆ. ಆದರೆ ಭೂ ಹಕ್ಕನ್ನು ಇದುವರೆಗೂ ನೀಡಿಲ್ಲ. ಇತ್ತೀಚೆಗೆ ಅಭಯಾರಣ್ಯವೆಂದು ಘೋಷಣೆ ಮಾಡಿಕೊಂಡು ಸಂತ್ರಸ್ತರಿಗೆ ನೀಡಿದ ಭೂಮಿ ಅರಣ್ಯ ವ್ಯಾಪ್ತಿಯಲ್ಲಿದೆ ಎಂದು ಹೇಳಲಾಗುತ್ತಿದೆ ಎಂದರು.

ಇತ್ತೀಚೆಗೆ ಹೈಕೋರ್ಟ್ ನೀಡಿದ ತೀರ್ಪಿನ ಸಂಬಂಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಕಾನೂನು ತಿದ್ದುಪಡಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವರಿಗೆ ಮಾಡಬೇಕು. ಸಂತ್ರಸ್ತರಿಗೆ ಹಕ್ಕು ಪತ್ರ ನೀಡಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಗೋಪಾಲನಾಯ, ಹೊರಬೈಲು ರಾಮಕೃಷ್ಣ, ಸುಧೀರ್ ಕುಮಾರ್, ರಘು ವಿಠಲ, ರಾಜಪ್ಪ ಮತ್ತಿತರರು ಇದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News