ಅಧಿವೇಶನದ ಬಳಿಕ ಉಳ್ಳಾಲಕ್ಕೆ ಭೇಟಿ ನೀಡಿ ಪರಿಶೀಲನೆ: ಸಚಿವ ಭೈರತಿ ಬಸವರಾಜ

Update: 2021-09-23 17:05 GMT

ಬೆಂಗಳೂರು, ಸೆ.23: ವಿಧಾನಮಂಡಲದ ಅಧಿವೇಶನ ಮುಗಿದ ನಂತರ ಮಂಗಳೂರು ನಗರದ ಉಳ್ಳಾಲದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.

ಗುರುವಾರ ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ಅಧಿವೇಶನ ಮುಗಿದ ನಂತರ ಯಾವುದಾದರೊಂದು ದಿನ ಉಳ್ಳಾಲಕ್ಕೆ ಭೇಟಿ ನೀಡಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳ ವೀಕ್ಷಣೆ ಮಾಡಿ ಅದರ ಸಾಧಕ-ಭಾದಕಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಲಾಗುವುದು ಎಂದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 8 ವಲಯಗಳಲ್ಲಿ ಮಲೀನ ನೀರು ಶುದ್ಧೀಕರಣ ಘಟಕ ಮತ್ತು ತ್ಯಾಜ್ಯ ಗುಂಡಿಗಳು ಒಳಗೊಂಡಂತೆ ಒಳಚರಂಡಿ ವ್ಯವಸ್ಥೆ ನಿರ್ಮಿಸುವ ವ್ಯವಸ್ಥೆ ಅವೈಜ್ಞಾನಿಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮತ್ತು ಇತರೆ ಸದಸ್ಯರು ಸೆ.16 ರಂದು ನಿಯಮ 330ರ ಅಡಿಯಲ್ಲಿ ಚರ್ಚೆಗೆ ತಂದಾಗ ಸಚಿವ ಬಸವರಾಜ ಉತ್ತರ ನೀಡಿದ್ದರು. 

ಆದರೆ, ಇದರ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ಅವಶ್ಯಕತೆ ಇದೆ ಎಂದು ಸದಸ್ಯರು ಪಟ್ಟು ಹಿಡಿದಿದ್ದರು. ಅದರಂತೆ, ಇಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಶಾಸಕರ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ವಿಧಾನಸಭಾರಾದ ಸದಸ್ಯ ಯು.ಟಿ.ಖಾದರ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಕೆ.ಎ.ತಿಪ್ಪೇಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಎಸ್.ಎಲ್.ಭೋಜೆಗೌಡ, ನರಸಿಂಹ ನಾಯಕ್, ರಮೇಶ್‍ಗೌಡ, ನಸೀರ್ ಅಹ್ಮದ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎನ್.ಜಯರಾಂ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಟಿ.ರೇಜು, ಮುಖ್ಯ ಅಭಿಯಂತರಾದ ಸಿದ್ದ ನಾಯಕ್, ಕೇಶವ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News