ಯಾದಗಿರಿಯಲ್ಲ್ಲಿ ಔಷಧಿ ಕಾರ್ಖಾನೆ ಪ್ರಾರಂಭ; ಸಚಿವ ನಿರಾಣಿ

Update: 2021-09-24 18:52 GMT

ಬೆಂಗಳೂರು, ಸೆ.24: `ರಾಜ್ಯದಲ್ಲಿ 2022ರ ನವೆಂಬರ್ 2ರಿಂದ 4ರ ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದ್ದಾರೆ.

ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸದುದ್ದೇಶದಿಂದ 2022ರ ನವೆಂಬರ್ 2ರಿಂದ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ' ಎಂದರು.
`ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ದೇಶ-ವಿದೇಶದಿಂದ ಹೆಚ್ಚಿನ ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ. ಅಲ್ಲದೆ, ಉದ್ಯೋಗ ಕ್ರಾಂತಿಯಾಗಿ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ನಮ್ಮ ರಾಜ್ಯದ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ ಎಂದರು.

`ಯಾದಗಿರಿ ಜಿಲ್ಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಔಷಧಿ ಕಾರ್ಖಾನೆಯನ್ನು ತೆರೆಯಲು ತೀರ್ಮಾನಿಸಲಾಗಿದೆ. ಇದಕ್ಕೆ ಕೇಂದ್ರ 1 ಸಾವಿರ ಕೋಟಿ ರೂ.ಅನುದಾನವನ್ನು ನೀಡುತ್ತದೆ. ಆ ಉದ್ದೇಶಕ್ಕೆ ಕೇಂದ್ರ ಮೂರು ರಾಜ್ಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ಕರ್ನಾಟಕವೂ ಆರ್ಥಿಕ ನೆರವು ಪಡೆಯಲಿದೆ. ಇದರಿಂದ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳು ಸಿಗಲಿದೆ' ಎಂದು ಹೇಳಿದರು. 

ಈ ಹಿಂದೆ ಲ್ಯಾಂಡ್ ಬ್ಯಾಂಕ್ ಇಲ್ಲದ ಕಾರಣ 2010ರಲ್ಲಿ ನ್ಯಾನೋ ಕಂಪೆನಿ ರಾಜ್ಯಕ್ಕೆ ಬರಲು ಸಾಧ್ಯವಾಗಲಿಲ್ಲ. ಅಂದಿನ ಸಿಎಂ ಯಡಿಯೂರಪ್ಪನವರು ಕಂಪೆನಿ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದರು. ಸಕಾಲಕ್ಕೆ ಸರಿಯಾಗಿ ಭೂಮಿ ಸಿಗದ ಕಾರಣ ಕಂಪೆನಿಯು ಗುಜರಾತಿಗೆ ತೆರಳಬೇಕಾಯಿತು' ಎಂದು ತಿಳಿಸಿದರು. 

`ಹೀಗಾಗಿಯೇ ರಾಜ್ಯದಲ್ಲಿ ಲ್ಯಾಂಡ್ ಬ್ಯಾಂಕ್ ಪರಿಕಲ್ಪನೆಯನ್ನು ಜಾರಿಗೆ ತಂದೆವು. ಪರಿಣಾಮ ಅನೇಕ ಕೈಗಾರಿಕೆಗಳು ಜಾರಿಯಾಗಲು ಸಾಧ್ಯವಾಯಿತು. ಯಾದಗಿರಿ ಜಿಲ್ಲೆ ಕಡೆಚೂರು ಮತ್ತು ಬಾಡಿಯಾಳ ಗ್ರಾಮದಲ್ಲಿ 3,232 ಹಾಗೂ 3,282 ಎಕರೆ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲಾಯಿತು. ಇದರಲ್ಲಿ 1,600 ಎಕರೆ ಜಮೀನನ್ನು ಅಭಿವೃದ್ಧಿಪಡಿಸಿ ಉದ್ಯಮಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು. 

ಕರ್ನಾಟಕದಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಚೆನ್ನೈ-ಮುಂಬೈ ಕೈಗಾರಿಕಾ ಕಾರಿಡಾರ್ ತುಮಕೂರು, ಬೆಂಗಳೂರು, ಮುಂಬೈ, ಆರ್ಥಿಕ ಕಾರಿಡಾರ್, ಹೈದರಾಬಾದ್-ಬೆಂಗಳೂರು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಕೈಗಾರಿಕೆಯಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದರು.

ಅಗತ್ಯ ಕ್ರಮ: ಕಾಂಗ್ರೆಸಿನ ಈಶ್ವರ್ ಖಂಡ್ರೆ ಪ್ರಶ್ನೆಗೆ ಉತ್ತರಿಸಿದ ನಿರಾಣಿ, `ಕೈಗಾರಿಕಾ ಪ್ರದೇಶಾಭಿವೃದ್ಧಿ ವತಿಯಿಂದ ಬೀದರ್ ಜಿಲ್ಲೆಯಲ್ಲಿ 1,096 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಪೈಕಿ 1,432 ಎಕರೆ ಜಮೀನನ್ನು 1,392 ಘಟಕಗಳಿಗೆ ಹಂಚಿಕೆ ಮಾಡಲಾಗಿದೆ. 1,150 ಎಕರೆ ಜಮೀನನ್ನು ನಾಲ್ಕು ಯೋಜನೆಗಳಿಗೆ ಕಾಯ್ದಿರಿಸಲಾಗಿದೆ ಎಂದರು.

ರಾಜ್ಯದಲ್ಲಿ ಕೈಗಾರಿಕಾ ಬಳಕೆಗೆ ಶೇ.0.48ರಷ್ಟು ಜಮೀನು ಬಳಸಿಕೊಳ್ಳುತ್ತಿದ್ದೇವೆ. ಇದರ ಪ್ರಮಾಣ ಮತ್ತಷ್ಟು ಹೆಚ್ಚಾಗಬೇಕಿದೆ. ಲ್ಯಾಂಡ್ ಮೂಲಕ ನಾವು ಕೈಗಾರಿಕಾ ಬೆಳವಣಿಗೆಗಳಿಗೆ ಉತ್ತೇಜನ ನೀಡುತ್ತಿದ್ದು, ಮೊದಲೇ ಭೂ ಸ್ವಾಧೀನಪಡಿಸಿಕೊಂಡರೆ ಕೈಗಾರಿಕೆಗಳನ್ನು ಸ್ಥಾಪಿಸಲು ಅನುಕೂಲವಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News