ಹಾನಗಲ್, ಸಿಂದಗಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ: ಕುಮಾರಸ್ವಾಮಿ

Update: 2021-09-28 05:56 GMT

ಬೆಂಗಳೂರು, ಸೆ.28: ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದಮನೆಯಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡುತ್ತಿದ್ದರು. 

ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂದಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.

ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಸಿಂದಗಿ ಕ್ಷೇತ್ರದಲ್ಲಿ ಪಕ್ಷದಿಂದ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ. ಇಂದಿನ ಸಭೆಯಲ್ಲಿ ಈ  ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಈ ಚುನಾವಣೆ ಗೆಲ್ಲಲು ಈ ಕಾರ್ಯಗಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News