ಅತ್ಯಾಚಾರ ಪ್ರಕರಣ: ಕಡಬ ಠಾಣೆಯ ಕಾನ್ ಸ್ಟೇಬಲ್ ವಿರುದ್ಧ ತನಿಖೆ ಮುಂದುವರಿಕೆ
ಕಡಬ, ಸೆ.28: ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ.
ಸಂತ್ರಸ್ತ ಯುವತಿಯ ತಂದೆಯು ಆರೋಪಿ ಶಿವರಾಜ್ ವಿರುದ್ಧ ಸೋಮವಾರ ದೂರು ನೀಡಿದ್ದು, ತನ್ನ ಮಗಳನ್ನು ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ. ಅಲ್ಲದೆ ಗರ್ಭಪಾತ ಮಾಡಿಸಲು ಹಣವನ್ನು ಕೂಡ ಪೋಲಿಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಗೆ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೊನಾವಣೆ ಹಾಗೂ ಡಿವೈಎಸ್ಪಿ ಗಾನ ಪಿ.ಕುಮಾರ್ ಸೋಮವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರು. ಇಂದು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.