ರಾಜ್ಯದ ನಾಲ್ಕು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕನ್ನಡ ಬೋಧನೆ: ಸಚಿವ ಡಾ. ಅಶ್ವತ್ಥ ನಾರಾಯಣ
ಬೆಂಗಳೂರು, ಸೆ. 29: ರಾಜ್ಯದ ನಾಲ್ಕು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ಸಾಲಿನಿಂದಲೇ ಕನ್ನಡದಲ್ಲಿ ಬೋಧನೆ-ಕಲಿಕೆ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬುಧವಾರ ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶುಲ್ಕದ ವಿಚಾರವಾಗಿ ಸಭೆ ನಡೆಸಲಾಗಿದೆ. ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾ ವಿದ್ಯಾಲಯ(ಸಿವಿಲ್), ಚಿಕ್ಕಬಳ್ಳಾಪುರದ ಎಸ್.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯ(ಸಿವಿಲ್), ಮೈಸೂರಿನ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ(ಮೆಕ್ಯಾನಿಕಲ್) ಮತ್ತು ವಿಜಯಪುರದ ಬಿಎಲ್ಡಿಇಎ, ವಿ.ಪಿ.ಡಾ.ಪಿ.ಜಿ.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜು(ಮೆಕ್ಯಾನಿಕಲ್)ಗಳಲ್ಲಿ ಕನ್ನಡದಲ್ಲಿ ಎಂಜಿನಿಯರಿಂಗ್ ಬೋಧನೆಗೆ ತಯಾರಿ ನಡೆದಿದೆ.
ಈ ಕಾಲೇಜುಗಳಲ್ಲಿ ತಲಾ 30 ವಿದ್ಯಾರ್ಥಿಗಳನ್ನು ಈ ಕೋರ್ಸ್ಗಳಿಗೆ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದರು. ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಬಿಎ) ಮಾನ್ಯತೆ ಪಡೆದಿರುವ ಕಾಲೇಜುಗಳಿಗೆ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಬೋಧಿಸಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.