ಕೈಗಾರಿಕೆಗಳಿಗೆ ಉದ್ಯೋಗ ಸೃಜನೆ ಆಧಾರಿತ ಉತ್ತೇಜನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-09-29 18:39 GMT

ಬೆಂಗಳೂರು, ಸೆ.29: ರಾಜ್ಯದಲ್ಲಿ ಹೂಡಿಕೆ ಮಾಡುವ ಕೈಗಾರಿಕೋದ್ಯಮಿಗಳಿಗೆ ಉದ್ಯೋಗ ಸೃಜನೆ ಆಧಾರದಲ್ಲಿ ಪ್ರೋತ್ಸಾಹಕ ನೀಡುವ ಕುರಿತು ನೀತಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ಕರ್ನಾಟಕ ಮಾಧ್ಯಮ ಅಕಾಡಮಿ 40 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಲಾಂಛನ ಬಿಡುಗಡೆ ಮಾಡಿ, ಕ್ಲಬ್ ಹೌಸ್ ಉದ್ಘಾಟಿಸಿ, ‘ನನ್ನ ಕನಸಿನ ಕರ್ನಾಟಕ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕೈಗಾರಿಕೆ, ಉದ್ಯಮಗಳಿಗೆ ಸ್ವಾತಂತ್ರ್ಯ ಪೂರ್ವ ಕಾಲದಿಂದಲೇ ಆದ್ಯತೆ ನೀಡಲಾಗುತ್ತಿದೆ. ಭಾರತ ಸರಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಗಳೂ ಸ್ಥಾಪನೆಯಾಗಿ ತಂತ್ರಜ್ಞಾನ, ಕುಶಲ ಮಾನವ ಸಂಪನ್ಮೂಲ ಹೊಂದಿದ ರಾಜ್ಯವಾಗಿದೆ. ಸಂಪದ್ಭರಿತ, ಸುರಕ್ಷಿತ ಕರ್ನಾಟಕ ನಿರ್ಮಾಣ ನನ್ನ ಕನಸು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅಂತೆಯೇ ಸಂಶೋಧನೆ ಮತ್ತು ಅಭಿವೃದ್ಧಿ ವಲಯದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ಇದಕ್ಕಾಗಿ ಹುಬ್ಬಳ್ಳಿಯ ಕೆಎಲ್‍ಇ ತಾಂತ್ರಿಕ ವಿವಿ ಕುಲಪತಿ ಪ್ರೊ. ಅಶೋಕ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗುವುದು ಎಂದು ತಿಳಿಸಿದರು. ಪ್ರವಾಸೋದ್ಯಮ, ಬಂದರುಗಳು ಹಾಗೂ ಒಳನಾಡು ಜಲಸಾರಿಗೆ ಕ್ಷೇತ್ರದಲ್ಲಿಯೂ ಉದ್ಯೋಗ ಸೃಜನೆಗೆ ವಿಫುಲ ಅವಕಾಶವಿದೆ ಎಂದರು.

ರಾಜ್ಯದ ಸರಾಸರಿ ತಲಾ ಆದಾಯದಲ್ಲಿ ಕೇವಲ ಶೇ. 30 ಜನರ ಕೊಡುಗೆಯೇ ಗಣನೀಯವಾದುದು. ಉಳಿದ ಜನರೂ ಆರ್ಥಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಆ ಮೂಲಕ ಅವರ ಮತ್ತು ರಾಜ್ಯದ ಆರ್ಥಿಕ ಅಭಿವೃದ್ಧಿಯಾಗಬೇಕು ಎಂಬ ಆಶಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ಮಾಧ್ಯಮ ಅಕಾಡಮಿ ಅಧ್ಯಕ್ಷ ಸದಾಶಿವ ಶೆಣೈ ಮಾತನಾಡಿದರು. ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಜಿ. ಜಗದೀಶ್, ಅಕಾಡಮಿಯ ಸದಸ್ಯರು, ಕಾರ್ಯದರ್ಶಿ ಸಿ. ರೂಪಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News