ದಲಿತ ವಿದ್ಯಾರ್ಥಿಗಳಿಗೆ ಊಟಕ್ಕೆ ಪ್ರತ್ಯೇಕ ಸರದಿ; ಪ್ರಾಚಾರ್ಯರ ವಿರುದ್ಧ ಪ್ರಕರಣ
Update: 2021-09-30 09:37 IST
ಅಮೇಥಿ: ಮಧ್ಯಾಹ್ನದ ಬಿಸಿಯೂಟ ವಿತರಿಸಲು ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸರದಿ ಸಾಲಿನಲ್ಲಿ ಬರುವಂತೆ ಸೂಚಿಸಿದ ಆರೋಪದಲ್ಲಿ ಸರ್ಕಾರಿ ಶಾಲೆಯ ಪ್ರಾಚಾರ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣವನ್ನು ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರ ಗಮನಕ್ಕೆ ತಂದ ಬಳಿಕ ಸಂಗ್ರಾಮಪುರ ಪ್ರದೇಶದ ಗಡೇರಿ ಪ್ರಾಥಮಿಕ ಶಾಲೆಯ ಪ್ರಾಚಾರ್ಯ ಕುಸುಮ್ ಸೋನಿ ಎಂಬವರ ವಿರುದ್ಧ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಲಾಗಿದೆ.
ವಿಷಯ ಗಮನಕ್ಕೆ ಬಂದ ತಕ್ಷಣ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದ್ದು, ಮೂಲ ಶಿಕ್ಷಣ ಅಧಿಕಾರಿ (ಬಿಎಸ್ಎ) ತನಿಖೆ ನಡೆಸಿ, ಪ್ರಾಚಾರ್ಯರ ಅಮಾನತಿಗೆ ಶಿಫಾರಸ್ಸು ಮಾಡಿದ್ದರು.
ಮಧ್ಯಾಹ್ನದ ಬಿಸಿಯೂಟದ ವೇಳೆ ದಲಿತ ವಿದ್ಯಾರ್ಥಿಗಳು ಪ್ರತ್ಯೇಕ ಸರದಿ ಸಾಲಿನಲ್ಲಿ ಬರುವಂತೆ ಸೂಚಿಸುವ ಮೂಲಕ ಮಕ್ಕಳಲ್ಲಿ ತಾರತಮ್ಯ ಎಸಗುತ್ತಿದ್ದಾರೆ ಎಂದು ಪ್ರಾಚಾರ್ಯರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು.