×
Ad

ಅಕ್ಟೋಬರ್ ತಿಂಗಳಲ್ಲೇ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಸಾಧ್ಯತೆ : ಸಚಿವ ಡಾ.ಕೆ.ಸುಧಾಕರ್

Update: 2021-10-01 19:11 IST

ಬೆಂಗಳೂರು, ಅ.1: ಅಕ್ಟೋಬರ್ ತಿಂಗಳಲ್ಲೇ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶುಕ್ರವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಝೈಡಸ್ ಡಿ ಮೂರನೇ ಹಂತದ ಟ್ರಯಲ್ ಈಗಾಗಲೇ ಕೊನೆಯ ಹಂತ ತಲುಪಿದೆ. ಇವತ್ತು ಅಥವಾ ನಾಳೆ ದರ ನಿಗದಿ ಆಗುವ ಸಾಧ್ಯತೆ ಇದೆ. ಅಂತಿಮವಾಗಿ ಕೇಂದ್ರ ಸರಕಾರ ಈ ಕುರಿತು ಪ್ರಕಟಿಸಲಿದೆ ಎಂದರು.

ಮಕ್ಕಳಲ್ಲಿ ಕೋವಿಡ್ ಪ್ರಮಾಣ ಆತಂಕಕಾರಿ ಆಗಿಲ್ಲ. ಶಾಲೆಗಳಲ್ಲಿ ಮಕ್ಕಳ ಚಟುವಟಿಕೆ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಸುಧಾಕರ್ ತಿಳಿಸಿದರು.

ಚಿತ್ರನಟ ಶಂಕರ್ ನಾಗ್ ಅವರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡಬೇಕೆಂಬ ಬೇಡಿಕೆ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಜನರ ಆಶಯ-ಕೋರಿಕೆಯನ್ನು ಮುಖ್ಯಮಂತ್ರಿ ಆಲಿಸಿ ಪರಿಶೀಲಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತನಾಡುವುದಾಗಿ ತಿಳಿಸಿದರು.

ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಅದನ್ನು ಹೊರತುಪಡಿಸಿ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಮೊದಲೇ ದೊಡ್ಡ ಪ್ರಮಾಣದ ಸಭೆ, ಸಮಾರಂಭಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕೇರಳ, ಮಹಾರಾಷ್ಟ್ರ ಮತ್ತಿತರ ಕಡೆ ಕೋವಿಡ್ ಪ್ರಮಾಣ ಕಡಿಮೆ ಆಗಿಲ್ಲ. ಆದುದರಿಂದ, ಅಲ್ಲಿಂದ ಬಂದವರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪಡೆಯುವುದು ಅನಿವಾರ್ಯವೆನಿಸಿದೆ. ಅವರು ರಾಜ್ಯ ಪ್ರವೇಶಿಸುವ 48 ಗಂಟೆಗಳ ಮುಂಚೆ ಪರೀಕ್ಷೆ ಮಾಡಿಸಿರಬೇಕು. ಮೂರನೇ ಅಲೆ ತಡೆಯುವ ಉದ್ದೇಶ ಇದರ ಹಿಂದಿದೆ ಎಂದು ಸುಧಾಕರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News